ಮುಂಬೈ, ಸೆ. 02 (DaijiworldNews/AA): ನಟ ಸುಶಾಂತ್ ಸಿಂಗ್ ರಜಪೂತ್ (ಮೃತ) ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಸಾವಿನ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸುವಂತೆ ಬಾಂಬೆ ಹೈಕೋರ್ಟ್ ಆದೇಶ ನೀಡಿದೆ. ಜೊತೆಗೆ ಪ್ರಕರಣ ಸಂಬಂಧ ಸಿಬಿಐ ಪ್ರತ್ಯೇಕವಾಗಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಕೋರ್ಟ್ ನಿರ್ದೇಶಿಸಿದೆ.

ದಿಶಾ ಸಾಲಿಯಾನ್ 2020ರ ಜೂನ್ 8ರಂದು ಮೃತಪಟ್ಟಿದ್ದರು. ಇದಾದ ಕೆಲವೇ ದಿನಗಳ ಬಳಿಕ, ನಟ ಸುಶಾಂತ್ ಸಿಂಗ್ ರಜಪೂತ್ ಅವರು ಮುಂಬೈನ ಬಾಂದ್ರಾದ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ. ಈ ಎರಡು ಸಾವುಗಳ ನಡುವೆ ಸಂಬಂಧವಿದೆ ಎಂಬ ಹಲವು ಆರೋಪಗಳು ಕೇಳಿಬಂದಿದ್ದವು.
ದಿಶಾ ಅವರ ತಂದೆ ಸತೀಶ್ ಸಾಲಿಯಾನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ಈ ಮಹತ್ವದ ನಿರ್ದೇಶನ ನೀಡಿದೆ. ಸಿಬಿಐ ಸತೀಶ್ ಸಾಲಿಯಾನ್ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕು ಮತ್ತು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಮುಂಬೈನ ಮಾಲ್ವಾಣಿ ಪೊಲೀಸ್ ಠಾಣೆ ಸಿಬಿಐಗೆ ಹಸ್ತಾಂತರಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿರುವುದಾಗಿ ಅರ್ಜಿದಾರರ ಪರ ವಕೀಲ ನಿಲೇಶ್ ಓಜಾ ತಿಳಿಸಿದ್ದಾರೆ.
ಅಲ್ಲದೆ, ತನಿಖೆಯ ನೇತೃತ್ವ ವಹಿಸಲು ಹಿರಿಯ ಅಧಿಕಾರಿಯೊಬ್ಬರನ್ನು ನೇಮಿಸುವಂತೆ ಸಿಬಿಐಗೆ ಸೂಚಿಸಲಾಗಿದೆ. ತನಿಖೆಯ ವೇಳೆ ಯಾರ ವಿರುದ್ಧ ಸಾಕ್ಷ್ಯಗಳು ದೊರೆಯುತ್ತವೆಯೋ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಸಾಕ್ಷ್ಯಾಧಾರಗಳಿಲ್ಲದೇ ಯಾರನ್ನೂ ಆರೋಪಿಯನ್ನಾಗಿ ಮಾಡಲಾಗುವುದಿಲ್ಲ ಎಂದು ನ್ಯಾಯಾಲಯ ತಿಳಿಸಿರುವುದಾಗಿ ಮಾಹಿತಿ ನೀಡಿದ್ದಾರೆ.
ಸಿಬಿಐ ತನಿಖೆಯ ಬಳಿಕ ನಕಾರಾತ್ಮಕ ವರದಿ ಸಲ್ಲಿಸಿದರೂ, ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನಾ ಅರ್ಜಿ ಸಲ್ಲಿಸುವ ಹಕ್ಕು ಅರ್ಜಿದಾರರಿಗೆ ಇದೆ ಎಂದು ನ್ಯಾಯಾಲಯದ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.