ಕುಂದಾಪು, ಜ. 07 (DaijiworldNews/TA): ತಲ್ಲೂರು ಮೂಲಕ ನೇರಳಕಟ್ಟೆ-ಆಜ್ರಿ-ಸಿದ್ದಾಪುರ ರಸ್ತೆಯ ಶೆಟ್ರಕಟ್ಟೆ ಎಂಬಲ್ಲಿ ಸೋಮವಾರ ಟಿಪ್ಪರ್ ಮತ್ತು ಕೆಎಸ್ಆರ್ಟಿಸಿ ಬಸ್ ಮಧ್ಯೆ ಸಂಭವಿಸಿದ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು ಇಬ್ಬರನ್ನು ಬಂಧಿಸಲಾಗಿದೆ.

ಟಿಪ್ಪರ್ ಚಾಲಕ ರಾಘವೇಂದ್ರ ಹಾಗೂ ಟಿಪ್ಪರ್ ಮಾಲಕ ಶ್ರೀಧರ್ ಬಂಧಿತ ಆರೋಪಿಗಳು. ಕೆಂಪು ಮಣ್ಣು ಜಾಗದ ಮಾಲಕ ಮಂಜುನಾಥ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಕೆಎಸ್ಆರ್ಟಿಸಿ ಮತ್ತು ಟಿಪ್ಪರ್ ಮಧ್ಯೆ ಸಂಭವಿಸಿದ ಅಪಘಾತದಿಂದ ಬಸ್ಸಿನಲ್ಲಿದ್ದ 39 ಮಂದಿ ಪ್ರಯಾಣಿಕರ ಪೈಕಿ 18 ಮಂದಿಗೆ ಗಾಯಗೊಂಡಿದ್ದು, ಇವರಲ್ಲಿ ಇಬ್ಬರು ವಿದ್ಯಾರ್ಥಿನಿಯರು ಸಹಿತ ಮೂರು ಮಂದಿ ತೀವ್ರ ಗಾಯ ಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸಂಬಂಧ ಕೆಎಸ್ಆರ್ಟಿಸಿ ಕುಂದಾಪುರ ಘಟಕದ ಮುಖ್ಯಸ್ಥರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿತ್ತು. ಕುಂದಾಪುರ ಗ್ರಾಮಾಂತರ ಠಾಣೆ ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ಠಾಣಾಧಿಕಾರಿ ನಾಸೀರ್ ಹುಸೇನ್ ಹಾಗೂ ಸಿಬ್ಬಂದಿ ತನಿಖೆ ನಡೆಸುತ್ತಿದ್ದಾರೆ. ಇನ್ನು ಅಪಘಾತದಲ್ಲಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾದ ಮೂವರ ಪೈಕಿ ಓರ್ವರು ಚೇತರಿಸಿಕೊಳ್ಳುತ್ತಿದ್ದು ಇಬ್ಬರು ಪಿಯುಸಿ ವಿದ್ಯಾರ್ಥಿನಿಯರ ಸ್ಥಿತಿ ಇನ್ನೂ ಗಂಭೀರವಾಗಿದೆ. ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಲಾಗಿದೆ ಎಂದು ಆಸ್ಪತ್ರೆ ವೈದ್ಯಕೀಯ ಮೂಲಗಳು ತಿಳಿಸಿವೆ.