ವಿಟ್ಲ, ಫೆ. 10 (DaijiworldNews/TA): ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಟ್ಲ ಸಮೀಪದ ಕೈಂತಿಲ ನಿವಾಸಿ ಪುರುಷೋತ್ತಮ ಆಚಾರ್ಯ (68) ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ.

ಕೆಲವು ದಿನಗಳ ಹಿಂದೆ ಮಂಗಳಪದವು ಎಂಬಲ್ಲಿ ಪುರುಷೋತ್ತಮ ಆಚಾರ್ಯ ಅವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಕಾರೊಂದು ಅವರಿಗೆ ಢಿಕ್ಕಿ ಹೊಡೆದಿತ್ತು. ಅಪಘಾತದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ತೀವ್ರ ಸ್ವರೂಪದ ಗಾಯಗಳಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.