ಉಡುಪಿ, ಮಾ. 23 (DaijiworldNews/TA): ಮಾರುಕಟ್ಟೆಯಲ್ಲಿ ಉಂಟಾಗಿರುವ ವಾಣಿಜ್ಯ ಅನಿಲ ಕೊರತೆಯನ್ನು ನೀಗಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲಕರ ಸಂಘದ ನಿಯೋಗ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಿತು.

ಸಂಘದ ನೋಂದಾಯಿತ ಸದಸ್ಯರಿಗೆ ಶೀಘ್ರದಲ್ಲಿ ಗ್ಯಾಸ್ ಪೂರೈಕೆ ಮಾಡುವಂತೆ ಒತ್ತಾಯಿಸಲಾಯಿತು. ಮನವಿಯೊಂದಿಗೆ ಸಂಘದ ನೋಂದಾಯಿತ ಮಾಲಕರ ಪಟ್ಟಿಯ ಪ್ರತಿಯನ್ನು ಹಸ್ತಾಂತರಿಸಲಾಯಿತು. ಕ್ಯಾಟರಿಂಗ್ ಉದ್ದಿಮೆದಾರರಿಗೆ ಆದ್ಯತೆಯ ಮೇರೆಗೆ ಗ್ಯಾಸ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. ಅನಿಲ ಪೂರೈಕೆಯಲ್ಲಿ ಆಗುತ್ತಿರುವ ವಿಳಂಬವನ್ನು ತಪ್ಪಿಸಲು ಸಂಬಂಧಪಟ್ಟ ಗ್ಯಾಸ್ ಏಜೆನ್ಸಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಸಕಾಲದಲ್ಲಿ ಗ್ಯಾಸ್ ಲಭ್ಯವಿಲ್ಲದೆ ಮದುವೆ ಹಾಗೂ ಇತರ ಶುಭ ಸಮಾರಂಭಗಳ ಅಡುಗೆ ಕೆಲಸಗಳಿಗೆ ತೊಂದರೆಯಾಗುತ್ತಿದ್ದು, ಇದನ್ನು ಕೂಡಲೇ ಸರಿಪಡಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭ ಸಂಘದ ಅಧ್ಯಕ್ಷ ನವೀನ್ ಅಮೀನ್ ಶಂಕರಪುರ, ಕಾರ್ಯದರ್ಶಿ ಗಣೇಶ್ ಸಾಲಿಯಾನ್, ಕೋಶಾಧಿಕಾರಿ ದೀಕ್ಷಿತ್ ಶೆಟ್ಟಿ ಹಾಗೂ ಜಿಲ್ಲಾ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.