ಬ್ರಹ್ಮಾವರ, ಮೇ. 16 (DaijiworldNews/AK): ಮೇ 15 ರ ರಾತ್ರಿ ಸಂಭವಿಸಿದ ಹಿಟ್ ಅಂಡ್ ರನ್ ಅಪಘಾತದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉಪ್ಪೂರು ಗ್ರಾಮದ ಕುದ್ರುಬೆಟ್ಟು ಬಳಿ ಸಂಭವಿಸಿದೆ.

ಪೊಲೀಸರ ಪ್ರಕಾರ, ಉಡುಪಿಯಿಂದ ಬ್ರಹ್ಮಾವರ ಕಡೆಗೆ ಹೋಗುತ್ತಿದ್ದ ಬಿಳಿ ಬಣ್ಣದ ಕಾರು, ಹೆದ್ದಾರಿ ದಾಟಲು ಪ್ರಯತ್ನಿಸುತ್ತಾ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಸುಮಾರು 30 ರಿಂದ 35 ವರ್ಷ ವಯಸ್ಸಿನ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು. ಅಪಘಾತದ ನಂತರ ಚಾಲಕ ವಾಹನ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಮೃತರ ಗುರುತು ಅಥವಾ ಅವರ ಸಂಬಂಧಿಕರ ಬಗ್ಗೆ ಯಾವುದೇ ಮಾಹಿತಿ ಇದ್ದಲ್ಲಿ ಪೊಲೀಸರು ಸಾರ್ವಜನಿಕರು 0820-2561044 ಅಥವಾ ಮೊಬೈಲ್ ಸಂಖ್ಯೆ 9480805453 ಗೆ ಸಂಪರ್ಕಿಸಲು ಮನವಿ ಮಾಡಿದ್ದಾರೆ.