ಮಂಗಳೂರು, ಸೆ. 04 (DaijiworldNews/AA): ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರಿನ ಹಂಪನಕಟ್ಟೆ ಹಾಗೂ ಸುತ್ತಮುತ್ತಲಿನ ಫುಟ್ಪಾತ್ಗಳಲ್ಲಿ ಹೂವಿನ ಅಂಗಡಿಗಳನ್ನು ತೆರೆದಿದ್ದ ಹೊರ ಜಿಲ್ಲೆಗಳ ವ್ಯಾಪಾರಿಗಳಿಗೆ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ)ಯ ಕಟ್ಟುನಿಟ್ಟಿನ ನಿಯಮ ಜಾರಿ ಸಂಕಷ್ಟ ತಂದಿದೆ.



ಸ್ಥಳೀಯರಿಂದ ಬಂದ ದೂರುಗಳ ಆಧಾರದ ಮೇಲೆ ಎಂಸಿಸಿ ಅಧಿಕಾರಿಗಳು ಗುರುವಾರ ತೆರವು ಕಾರ್ಯಾಚರಣೆ ನಡೆಸಿದರು. ಇತ್ತೀಚೆಗೆ ಫುಟ್ಪಾತ್ಗಳಲ್ಲಿ ವ್ಯಾಪಾರ ನಡೆಸುತ್ತಿರುವ ಸಣ್ಣಪುಟ್ಟ ಬೀದಿ ವ್ಯಾಪಾರಿಗಳ ವಿರುದ್ಧ ಮಹಾನಗರ ಪಾಲಿಕೆ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದೆ. ಇದರ ಪರಿಣಾಮವಾಗಿ, ಹಬ್ಬದ ಸಂದರ್ಭ ಹೂವುಗಳನ್ನು ಮಾರಾಟ ಮಾಡಲು ದೂರದ ಜಿಲ್ಲೆಗಳಿಂದ ಅಪಾರ ಪ್ರಮಾಣದ ಹೂವುಗಳೊಂದಿಗೆ ಮಂಗಳೂರಿಗೆ ಆಗಮಿಸಿದ್ದ ವ್ಯಾಪಾರಿಗಳು ವ್ಯಾಪಾರ ನಡೆಸಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಪ್ರತಿ ವರ್ಷ ಗಣೇಶ ಚತುರ್ಥಿ, ನಾಗರ ಪಂಚಮಿ, ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ವಿಜಯದಶಮಿ ಸೇರಿದಂತೆ ಪ್ರಮುಖ ಹಬ್ಬಗಳ ಸಂದರ್ಭದಲ್ಲಿ ಹಾಸನ, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಹೂ ಬೆಳೆಗಾರರು ಹಾಗೂ ವ್ಯಾಪಾರಿಗಳು ಮಂಗಳೂರಿಗೆ ಆಗಮಿಸುತ್ತಾರೆ. ಸಾಮಾನ್ಯವಾಗಿ ಒಂದು ಅಥವಾ ಎರಡು ದಿನ ಹೂವುಗಳನ್ನು ಮಾರಾಟ ಮಾಡಿ ಅವರು ತಮ್ಮ ಊರುಗಳಿಗೆ ಮರಳುತ್ತಾರೆ. ಆದರೆ ಈ ಬಾರಿ ಅಷ್ಟಮಿ ಮುನ್ನಾದಿನ ಮಂಗಳೂರಿಗೆ ಆಗಮಿಸಿದ್ದ ವ್ಯಾಪಾರಿಗಳು ದಿಢೀರ್ ತೆರವು ಕಾರ್ಯಾಚರಣೆಯಿಂದ ಆಘಾತಕ್ಕೊಳಗಾಗಿದ್ದಾರೆ.
ಗುರುವಾರ ಹಂಪನಕಟ್ಟೆ ಹಾಗೂ ಸುತ್ತಮುತ್ತ ನಡೆದ ಕಾರ್ಯಾಚರಣೆಯಲ್ಲಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ತಾತ್ಕಾಲಿಕ ಅಂಗಡಿಗಳು ಹಾಗೂ ಇತರ ವ್ಯವಸ್ಥೆಗಳನ್ನು ಎಂಸಿಸಿ ಅಧಿಕಾರಿಗಳು ತೆರವುಗೊಳಿಸಿದರು. ಸಾರ್ವಜನಿಕರ, ವಿಶೇಷವಾಗಿ ಪಾದಚಾರಿಗಳ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕಾಗಿ ಫುಟ್ಪಾತ್ಗಳನ್ನು ಮೀಸಲಿಡಲಾಗಿದ್ದು, ಯಾವುದೇ ಅಕ್ರಮ ಒತ್ತುವರಿಯನ್ನು ಸಹಿಸುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಫುಟ್ಪಾತ್ಗಳನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವ ನಿಟ್ಟಿನಲ್ಲಿ ಒತ್ತುವರಿ ಮಾಡಲಾಗಿದ್ದ ವಸ್ತುಗಳು ಹಾಗೂ ತಾತ್ಕಾಲಿಕ ವ್ಯಾಪಾರ ಮಳಿಗೆಗಳನ್ನು ತೆರವುಗೊಳಿಸಲಾಯಿತು. ಮುಂದಿನ ದಿನಗಳಲ್ಲಿ ಬೀದಿ ವ್ಯಾಪಾರಿಗಳು ಅಕ್ರಮವಾಗಿ ಫುಟ್ಪಾತ್ಗಳನ್ನು ಆಕ್ರಮಿಸಿಕೊಂಡಿರುವುದು ಕಂಡುಬಂದರೆ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ, ದಕ್ಷಿಣ ಕನ್ನಡ ಜಿಲ್ಲಾ ಬೀದಿ ವ್ಯಾಪಾರಿಗಳ ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಅವರು ಮಹಾನಗರ ಪಾಲಿಕೆಯ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ. ಹಬ್ಬದ ಸಂದರ್ಭ ಹೂವುಗಳನ್ನು ಮಾರಾಟ ಮಾಡಲು ವಿಶೇಷವಾಗಿ ಹೊರ ಜಿಲ್ಲೆಗಳಿಂದ ಆಗಮಿಸುವ ರೈತರು ಹಾಗೂ ಹೂವಿನ ವ್ಯಾಪಾರಿಗಳನ್ನು ಎಂಸಿಸಿ ಗುರಿಯಾಗಿಸಿಕೊಂಡಿರುವುದು ಅತ್ಯಂತ ಖಂಡನೀಯ ಎಂದು ಅವರು ಹೇಳಿದ್ದಾರೆ.