ಬೆಳ್ತಂಗಡಿ, ಸೆ. 08 (DaijiworldNews/AA): ಭ್ರಷ್ಟಾಚಾರದ ಆರೋಪಗಳಿಗೆ ಸಂಬಂಧಿಸಿದಂತೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಹಾಗೂ ಮಡಂತ್ಯಾರು ಗ್ರಾಮ ಪಂಚಾಯತ್ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ.

ಸಾರ್ವಜನಿಕರಿಂದ ಲೋಕಾಯುಕ್ತ ಕೇಂದ್ರ ಕಚೇರಿಗೆ ಸಲ್ಲಿಕೆಯಾಗಿದ್ದ ಭ್ರಷ್ಟಾಚಾರದ ದೂರುಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ನಡೆಯುತ್ತಿರುವ ತನಿಖೆಯ ಭಾಗವಾಗಿ ಅಧಿಕಾರಿಗಳು ಎರಡೂ ಗ್ರಾಮ ಪಂಚಾಯತ್ ಕಚೇರಿಗಳಿಗೆ ಭೇಟಿ ನೀಡಿ, ಸ್ಥಳೀಯ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಉಡುಪಿ ಜಿಲ್ಲಾ ಲೋಕಾಯುಕ್ತ ಇನ್ಸ್ಪೆಕ್ಟರ್ ಮಂಜುನಾಥ್ ಶಂಕರಹಳ್ಳಿ ನೇತೃತ್ವದ ಎಂಟು ಮಂದಿಯ ಲೋಕಾಯುಕ್ತ ತಂಡ ಬೆಳಗ್ಗೆ ಸುಮಾರು 10 ಗಂಟೆಗೆ ಕುವೆಟ್ಟು ಹಾಗೂ ಮಡಂತ್ಯಾರು ಗ್ರಾಮ ಪಂಚಾಯತ್ ಕಚೇರಿಗಳಿಗೆ ಆಗಮಿಸಿತು.
ತಂಡದಲ್ಲಿ ರಾಘವೇಂದ್ರ ಸಾಲಿಗ್ರಾಮ, ಆದರ್ಶ್, ಅರುಣ್ ಕುಮಾರ್ ಹಾಗೂ ಸೂರಜ್ ಕಾಪು ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದು, ವಿವಿಧ ಕಡತಗಳು ಹಾಗೂ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ.
ಸದ್ಯ ದಾಖಲೆಗಳ ಪರಿಶೀಲನೆ ಹಾಗೂ ಸಮಗ್ರ ತಪಾಸಣೆ ಪ್ರಕ್ರಿಯೆ ಮುಂದುವರಿದಿದ್ದು, ಇನ್ನಷ್ಟು ಸಮಯ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.