ಮೈಸೂರು,ಏ.07 (DaijiworldNews/AK): ಕಾಂಗ್ರೆಸ್ಸಿನದು ಬಡವರ ವಿರೋಧಿ, ಜನವಿರೋಧಿ, ರೈತ ವಿರೋಧಿ, ಹಿಂದೂ ವಿರೋಧಿ ದರಿದ್ರ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದರು.

ಜನಾಕ್ರೋಶ ಯಾತ್ರೆ ಆರಂಭದ ಸಂಬಂಧ ಇಂದು ಇಲ್ಲಿನ ಗಾಂಧಿ ಸ್ಕ್ವೇರ್ ನಲ್ಲಿ ಬಹಿರಂಗ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಹತ್ತಾರು ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರು ರಾಜ್ಯಕ್ಕೆ ಕೊಟ್ಟ ಕೊಡುಗೆ ಏನು ಎಂದು ಜನತೆ ಪ್ರಶ್ನಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.
ನೀವೇನು ಅಭಿವೃದ್ಧಿ ಕೆಲಸ ಮಾಡಿದ್ದೀರೆಂದು ರಾಜ್ಯದ ಜನರು ಕೇಳುತ್ತಿದ್ದಾರೆ ಎಂದರು.ಸ್ವಕ್ಷೇತ್ರ ಇರುವ ಮೈಸೂರು ಜಿಲ್ಲೆಗೆ ಮುಖ್ಯಮಂತ್ರಿಗಳು ಅಭಿವೃದ್ಧಿಗೆ ಹಣವನ್ನೇ ನೀಡಿಲ್ಲ; ಯಡಿಯೂರಪ್ಪ ಅವರು ಹಿಂದಿನ ಬಿಜೆಪಿ ಆಡಳಿತದಲ್ಲಿ ಸಿಎಂ ಆಗಿದ್ದಾಗ ಸಾವಿರಾರು ಕೋಟಿ ರೂ. ಕೊಟ್ಟಿದ್ದರು ಎಂದು ವಿವರಿಸಿದರು. ಬಿಜೆಪಿ ಪ್ರಾರಂಭ ಮಾಡಿದ ಈ ಹೋರಾಟವು ನಾಡಿನ ಜನರ ಧ್ವನಿಯಾಗಲಿದೆ ಎಂದು ಎಚ್ಚರಿಸಿದರು.
ಬೆಲೆ ಏರಿಕೆ ಮೂಲಕ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಸರಕಾರ ಅಳವಡಿಸಿಕೊಂಡಿದೆ. ಜನವಿರೋಧಿ ಕಾಂಗ್ರೆಸ್ ಸರಕಾರ ಮತ್ತು ಜನವಿರೋಧಿ ಮುಖ್ಯಮಂತ್ರಿಗಳ ಧೋರಣೆಯನ್ನು ಜನರಿಗೆ ಮನವರಿಕೆ ಮಾಡಿಕೊಡಲು ಈ ಯಾತ್ರೆ ನಡೆಯುತ್ತಿದೆ ಎಂದು ವಿವರಿಸಿದರು.
ಅಧಿಕಾರಕ್ಕೆ ಬರುವ ಮೊದಲು ಅಹಿಂದ ಎಂದು ಭಾಷಣ ಮಾಡುತ್ತಿದ್ದ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತ ಬಳಿಕ ಹಿಂದುಳಿದ ಸಮಾಜಗಳನ್ನೇ ಮರೆತರು. ಅವರಿಗೆ ಯಾವುದೇ ಯೋಜನೆಗಳನ್ನು ಕೊಟ್ಟಿಲ್ಲ. ದಲಿತರ ಅಭ್ಯುದಯಕ್ಕೆ ಬಳಕೆ ಆಗಬೇಕಿದ್ದ 38 ಸಾವಿರ ಕೋಟಿ ಎಸ್ಇಟಿ, ಟಿಎಸ್ಪಿ ಹಣವನ್ನು ಸಿದ್ದರಾಮಯ್ಯನವರು ಬೇರೆ ಕಡೆ ವರ್ಗಾವಣೆ ಮಾಡಿದ್ದಾರೆ ಎಂದು ಟೀಕಿಸಿದರು. ಸಿದ್ದರಾಮಯ್ಯನವರು ಕೇವಲ ಅಲ್ಪಸಂಖ್ಯಾತ ನಾಯಕರಾಗಲು ಹೊರಟಿದ್ದಾರೆ ಎಂದು ಆಕ್ಷೇಪಿಸಿದರು.