ನವದೆಹಲಿ, ಏ.24 (DaijiworldNews/AA): ಕಾಶ್ಮೀರದ ಪಹಲ್ಲಾಮ್ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಪಾಕಿಸ್ತಾನದೊಂದಿಗಿನ ಸಿಂಧೂ ಜಲ ಒಪ್ಪಂದವನ್ನು ತಕ್ಷಣದಿಂದಲೇ ಅಮಾನತುಗೊಳಿಸಲು ನಿರ್ಧರಿಸಿದೆ.

ಭಾರತದ ಮೇಲಿನ ದಾಳಿಗೆ ಪಾಕಿಸ್ತಾನ ತೆರೆಮರೆಯಲ್ಲಿ ಕುಮ್ಮಕ್ಕು ನೀಡಿರುವುದು ಖಚಿತವಾಗಿರುವುದರಿಂದ ಭಾರತ ರಾಜತಾಂತ್ರಿಕ ಮಾರ್ಗದ ಮೂಲಕ ಪಾಕಿಸ್ತಾನಕ್ಕೆ ತಿರುಗೇಟು ನೀಡಲು ಮುಂದಾಗಿದೆ. ಭಾರತದಲ್ಲಿ ಇರುವ ಪಾಕಿಸ್ತಾನದ ದೂತಾವಾಸ ಕಚೇರಿಗಳಲ್ಲಿನ ಮಿಲಿಟರಿ ರಾಜತಾಂತ್ರಿಕರನ್ನು ದೇಶದಿಂದ ಹೊರಗೆ ಕಳುಹಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
ಪಾಕಿಸ್ತಾನದೊಂದಿಗಿನ ದಶಕಗಳಷ್ಟು ಹಳೆಯದಾದ ಸಿಂಧೂ ನದಿ ನೀರು ಒಪ್ಪಂದವನ್ನು ಅನಿರ್ದಿಷ್ಟವಾಗಿ ಸ್ಥಗಿತಗೊಳಿಸುವುದರಿಂದ ಸಿಂಧೂ ನದಿ ಮತ್ತು ಅದರ ಉಪನದಿಗಳಾದ ಝೀಲಂ, ಚೆನಾಬ್, ರಾವಿ, ಬಿಯಾಸ್ ಮತ್ತು ಸಟ್ಲಜ್ಗಳಿಂದ ಪಾಕಿಸ್ತಾನಕ್ಕೆ ನೀರು ಸರಬರಾಜು ಸ್ಥಗಿತಗೊಳ್ಳುತ್ತದೆ. ಈ ನದಿಗಳು ಪಾಕಿಸ್ತಾನಕ್ಕೆ ನೀರು ಸರಬರಾಜು ಮಾಡುತ್ತದೆ. ಭಾರತ ಸರ್ಕಾರದ ಈ ದಿಟ್ಟ ನಿರ್ಧಾರವು ಪಾಕಿಸ್ತಾನದ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನವದೆಹಲಿಯಲ್ಲಿ ಬುಧವಾರ ಸಂಜೆ ನಡೆದ 'ಭದ್ರತೆ ಕುರಿತ ಸಚಿವ ಸಂಪುಟ' ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ವಿಕ್ರಮ್ ಮಿಸ್ತ್ರಿ, 1960ರಲ್ಲಿ ಮಾಡಿಕೊಂಡ ಸಿಂಧೂ ಜಲ ಒಪ್ಪಂದವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತಿನಲ್ಲಿ ಇರಿಸಲಾಗಿದೆ. ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ವಿಶ್ವಾಸ ಮೂಡಿಸುವ ಬಗೆಯಲ್ಲಿ ಹಾಗೂ ಶಾಶ್ವತವಾಗಿ ನಿಲ್ಲಿಸುವವರೆಗೆ ಈ ತೀರ್ಮಾನ ಜಾರಿಯಲ್ಲಿ ಇರುತ್ತದೆ ಎಂದು ತಿಳಿಸಿದರು.
ಅಟ್ಟಾರಿ ಗಡಿಯಲ್ಲಿ ಇರುವ ಚೆಕ್ಪೋಸ್ಟ್ ಅನ್ನು (ತಪಾಸಣಾ ಠಾಣೆ) ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಲಾಗುತ್ತದೆ. ಈ ಮಾರ್ಗದ ಮೂಲಕ ಗಡಿ ದಾಟಿದವರು ಮೇ 1ಕ್ಕೆ ಮೊದಲು ಮರಳಬೇಕು. ನವದೆಹಲಿಯಲ್ಲಿ ಇರುವ ಪಾಕಿಸ್ತಾನದ ದೂತಾವಾಸ ಕಚೇರಿಗಳಲ್ಲಿ ಕರ್ತವ್ಯದಲ್ಲಿರುವ ಮಿಲಿಟರಿ, ರಕ್ಷಣೆ, ನೌಕಾಸೇನೆ ಮತ್ತು ವಾಯುಸೇನೆಯ ಸಲಹೆಗಾರರನ್ನು ಭಾರತದಿಂದ ಹೊರಕ್ಕೆ ಕಳುಹಿಸಲಾಗುತ್ತದೆ. ಅವರು ಒಂದು ವಾರದಲ್ಲಿ ಭಾರತದಿಂದ ನಿರ್ಗಮಿಸಬೇಕಿದೆ. ಇಸ್ಲಾಮಾಬಾದ್ನಲ್ಲಿ ಇರುವ ಭಾರತದ ದೂತಾವಾಸ ಕಚೇರಿಗಳಿಂದ ರಕ್ಷಣೆ, ನೌಕಾಪಡೆ ಮತ್ತು ವಾಯುಪಡೆಯ ಸಲಹೆಗಾರರನ್ನು ಭಾರತವು ವಾಪಸ್ ಕರೆಸಿಕೊಳ್ಳಲಿದೆ. ದೂತಾವಾಸ ಕಚೇರಿಗಳ ಸಿಬ್ಬಂದಿ ಸಂಖ್ಯೆಯನ್ನು ಈಗಿರುವ 55ರಿಂದ 30ಕ್ಕೆ ಇಳಿಸಲಾಗುತ್ತದೆ. ಇದು ಮೇ 1ಕ್ಕೆ ಮೊದಲು ಜಾರಿಗೆ ಬರಲಿದೆ ಎಂದು ಮಾಹಿತಿ ನೀಡಿದರು.
ಇನ್ನು ಪಾಕಿಸ್ತಾನದ ಪ್ರಜೆಗಳಿಗೆ ಸಾರ್ಕ್ ವೀಸಾ ವಿನಾಯಿತಿ ಯೋಜನೆಯ ಅಡಿಯಲ್ಲಿ ಭಾರತ ಪ್ರವೇಶಿಸಲು ಅವಕಾಶ ಇರುವುದಿಲ್ಲ. ಈಗಾಗಲೇ ಇಂತಹ ವೀಸಾ ಪಡೆದಿದ್ದರೆ, ಅದು ರದ್ದಾಗಿದೆ ಎಂದು ಭಾವಿಸಬೇಕು. ಪಹಲ್ಲಾಮ್ನಲ್ಲಿ ನಡೆದ ದಾಳಿಯ ಬಗ್ಗೆ ಸಮಿತಿಗೆ ಪೂರ್ಣ ವಿವರ ಒದಗಿಸಲಾಯಿತು. ವಿಶ್ವದ ಹಲವು ರಾಷ್ಟ್ರಗಳು ಭಾರತದ ಜೊತೆ ನಿಲ್ಲುವುದಾಗಿ ಹೇಳಿವೆ. ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿದ ಹಿನ್ನೆಲೆಯಲ್ಲಿ, ಈ ಪ್ರದೇಶವು ಆರ್ಥಿಕ ಬೆಳವಣಿಗೆಯ ಕಡೆ ಸಾಗುತ್ತಿರುವ ಕಾರಣಕ್ಕೆ ಈ ದಾಳಿ ನಡೆದಿದೆ ಎಂಬುದನ್ನು ಸಭೆಯ ಗಮನಕ್ಕೆ ತರಲಾಯಿತು ಎಂದು ಹೇಳಿದರು.