ಬೆಂಗಳೂರು, ಜೂ. 09 (DaijiworldNews/AK): ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಪ್ರಶ್ನಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡಿಎನ್ಎ ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿರುವ ಅರ್ಜಿಗಳನ್ನು ಜೂ.12ಕ್ಕೆ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ಸೋಮವಾರ ತಿಳಿಸಿದೆ.

ಆರ್ಸಿಬಿ ಮತ್ತು ಡಿಎನ್ಎ ಎಂಟರ್ಟೈನ್ಮೆಂಟ್ ತಮ್ಮ ವಿರುದ್ಧದ ಎಫ್ಐಆರ್ಗಳನ್ನು ಪ್ರಶ್ನಿಸಿ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಮಾಲೀಕ ರಾಯಲ್ ಚಾಲೆಂಜರ್ಸ್ ಸ್ಪೋಟ್ಸ್ ಲಿಮಿಟೆಡ್ ಈ ಪ್ರಕರಣದಲ್ಲಿ ತನ್ನನ್ನು ತಪ್ಪಾಗಿ ಸಿಲುಕಿಸಲಾಗಿದೆ. ಸೀಮಿತ ಪಾಸ್ಗಳು ಮಾತ್ರ ಲಭ್ಯವಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಉಚಿತ ಪಾಸ್ಗಳಿಗೂ ಸಹ, ಪ್ರವೇಶಕ್ಕೆ ಪೂರ್ವ ನೋಂದಣಿ ಕಡ್ಡಾಯ ಎಂದು ಹೇಳಲಾಗಿತ್ತು ಎಂದು ವಾದಿಸಿದೆ.
ವಾದ -ಪ್ರತಿವಾದ ಆಲಿಸಿದ ನ್ಯಾಯಪೀಠ ಈಗಗಾಲೇ ಬಂಧಿಸದಿದ್ದರೆ ಬಲವಂತದ ಕ್ರಮ ಬೇಡ ಎಂದು ರಾಜ್ಯ ಸರಕಾರಕ್ಕೆ ಮೌಖಿಕವಾಗಿ ಸೂಚನೆ ನೀಡಿದೆ. ಇದರಿಂದಾಗಿ ಡಿಎನ್ಎ, ಆರ್ಸಿಬಿಯ ಸಿಬ್ಬಂದಿಗಳಿಗೆ ಮಧ್ಯಂತರ ರಿಲೀಫ್ ಸಿಕ್ಕಿದೆ.