ನವದೆಹಲಿ, ಸೆ. 02 (DaijiworldNews/AK):ಉತ್ತರ ಭಾರತದಾದ್ಯಂತ ಮಳೆಯಿಂದ ಮೇಘಸ್ಫೋಟ, ಭೂಕುಸಿತ, ಪ್ರವಾಹದಿಂದಾಗಿ 100ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಇನ್ನೂ ಹಲವರು ಕಾಣೆಯಾಗಿದ್ದಾರೆ. ಈ ಹಿನ್ನೆಲೆ ವಿಶೇಷ ಪ್ಯಾಕೇಜ್ ಘೋಷಿಸಲು ಕೇಂದ್ರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಒತ್ತಾಯಿಸಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಉತ್ತರ ಭಾರತದ ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರ ಸರ್ಕಾರ ಹೆಚ್ಚಿನ ಹಣಕಾಸು ನೆರವು ಒದಗಿಸಬೇಕು. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಉತ್ತರಾಖಂಡ ಮತ್ತು ಹರಿಯಾಣ ರಾಜ್ಯಗಳಿಗೆ ಬೇಡಿಕೆಗೆ ಅನುಗುಣವಾಗಿ ಮೀಸಲಾದ ಪ್ಯಾಕೇಜ್ನ್ನು ತಕ್ಷಣವೇ ನೀಡಬೇಕು ಎಂದಿದ್ದಾರೆ.
ನೈಸರ್ಗಿಕ ವಿಕೋಪದ ಹಿನ್ನೆಲೆ ಯಾವುದೇ ರಾಜಕೀಯ ಮಾಡಬಾರದು, ಎಲ್ಲಾ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಅಗತ್ಯ ಪರಿಹಾರವನ್ನು ನೀಡಲು ಪಿಎಂ ನಿಧಿಯನ್ನು ಬಳಸಿಕೊಳ್ಳಬೇಕು, ಅಗತ್ಯ ನೆರವು ನೀಡುವಂತೆ ಖರ್ಗೆ ಕರೆ ನೀಡಿದ್ದಾರೆ.
ಇತ್ತೀಚಿಗೆ ಉತ್ತರಾಖಂಡದಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಇದಕ್ಕೂ ಮುನ್ನ ಆಗಸ್ಟ್ನಲ್ಲಿ ಉಂಟಾದ ಸರಣಿ ಮೇಘಸ್ಫೋಟ, ಭೂಕುಸಿತ ಮತ್ತು ಹಠಾತ್ ಪ್ರವಾಹದಿಂದಾಗಿ 69 ಜನರು ಕಾಣೆಯಾಗಿದ್ದಾರೆ. ಹಲವು ಮನೆಗಳು ನಾಶವಾಗಿ ಪ್ರಾಣಿಗಳು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿವೆ. ಸದ್ಯ ಹವಾಮಾನ ಇಲಾಖೆ ಉತ್ತರಾಖಂಡಕ್ಕೆ ರೆಡ್ ಅಲರ್ಟ್ ಘೋಷಿಸಿದೆ. ಕಳೆದ ಹದಿನೈದು ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆ ಹಾಗೂ ಹಠಾತ್ ಪ್ರವಾಹದಿಂದಾಗಿ 50ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.