ಬೆಂಗಳೂರು, ಅ. 05 (DaijiworldNews/AA): ಆರ್ಥಿಕ- ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಸರ್ಕಾರ ಜಾತಿ ಜನಗಣತಿ ಮಾಡುತ್ತಿದ್ದು, ದಿನೇದಿನೇ ಇದರಿಂದ ಗೊಂದಲಗಳು ಹೆಚ್ಚಾಗುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪ್ರತಿಕ್ರಿಯೆಯನ್ನು ನೋಡಿದಾಗಲೇ ಇದು ಗೊತ್ತಾಗುತ್ತದೆ. 60 ಪ್ರಶ್ನೆಗಳನ್ನು ಜನಸಾಮಾನ್ಯರ ಮುಂದೆ ಇಟ್ಟಿದ್ದಾರೆ. ಎಲ್ಲ ಸಮಾಜಗಳಲ್ಲೂ ಗೊಂದಲ ಸೃಷ್ಟಿಯಾಗಿದೆ. ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ರಾಜ್ಯ ಸರ್ಕಾರ ಈ ನಿರ್ಣಯ ಮಾಡಿದ್ದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ವಿಕಲಚೇತನರನ್ನೂ ಇದಕ್ಕೆ ಜೋಡಿಸಿದ್ದಾರೆ. ಇದರ ಬಗ್ಗೆ ಸಾಕಷ್ಟು ಟೀಕೆ ವ್ಯಕ್ತವಾಗಿದೆ. ಮುಖ್ಯಮಂತ್ರಿಗಳಿಗೆ ಇಷ್ಟೊಂದು ಆತುರ ಯಾಕೆ" ಎಂದು ಪ್ರಶ್ನೆ ಮಾಡಿದ್ದಾರೆ.
"ಸರ್ಕಾರ ಆರ್ಥಿಕ- ಸಾಮಾಜಿಕ- ಶೈಕ್ಷಣಿಕ ನ್ಯಾಯ ನೀಡಲಿ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕೆಂಬ ವಿಚಾರದಲ್ಲಿ ಬಿಜೆಪಿಯಲ್ಲಿ ಗೊಂದಲ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಐತಿಹಾಸಿಕ ನಿರ್ಧಾರವನ್ನು ಘೋಷಿಸಿದ್ದಾರೆ. ಸ್ವಾತಂತ್ರ್ಯ ಬಂದ ನಂತರದಲ್ಲಿ ಯಾವುದೇ ಪ್ರಧಾನಮಂತ್ರಿಗಳು ನಿರ್ಧಾರ ಮಾಡದೇ ಇರುವಂಥ ನಿರ್ಧಾರ ಇದಾಗಿದೆ. ಇಡೀ ದೇಶದಲ್ಲಿ ಜಾತಿ ಜನಗಣತಿ ಪ್ರಾರಂಭಿಸುವುದಾಗಿ ಪ್ರಕಟಿಸಿದ್ದಾರೆ. ಇದರ ನಡುವೆ ಕರ್ನಾಟಕದಲ್ಲಿ ಈ ರೀತಿ ಗೊಂದಲವನ್ನು ಸೃಷ್ಟಿಸುವ ಅವಶ್ಯಕತೆ ಇರಲಿಲ್ಲ" ಎಂದು ಹೇಳಿದ್ದಾರೆ.