ಬೆಳಗಾವಿ, ,ಡಿ. 18 (DaijiworldNews/AK):ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೆಲ ದರೋಡೆ, ಅಪಹರಣದಂತಹ ಕೇಸ್ಗಳಲ್ಲಿ ಪೊಲೀಸರೇ ಭಾಗಿಯಾಗಿರುವ ಆತಂಕಕಾರಿ ಮಾಹಿತಿ ಬಹಿರಂಗವಾಗಿತ್ತು. ಈ ನಡುವೆ ಕಳೆದ ಮೂರು ವರ್ಷಗಳಲ್ಲಿ ರಾಜ್ಯದ ಬರೋಬ್ಬರಿ 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಹೊರಬಂದಿರೋದು ಅಚ್ಚರಿ ಮೂಡಿಸಿದೆ.

ಬೆಳಗಾವಿಯಲ್ಲಿ ಅಧಿವೇಶನದಲ್ಲಿ ವಿಧಾನ ಪರಿಷತ್ನ ಜೆಡಿಎಸ್ ಸದಸ್ಯ ಶರವಣ ಅವರ ಪ್ರಶ್ನೆಗೆ ಉತ್ತರಿಸಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ರಾಜ್ಯದಲ್ಲಿ ಕಳೆದ 3 ವರ್ಷಗಳ ಅವಧಿಯಲ್ಲಿ ಒಟ್ಟು 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂದು ಅಂಕಿ-ಅಂಶ ಸಮೇತ ಮಾಹಿತಿ ನೀಡಿದ್ದಾರೆ.
ಗೃಹಸಚಿವರ ಉತ್ತರದ ಬೆನ್ನಲ್ಲೇ ಈ ಬಗ್ಗೆ ಶರವಣ ಅವರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಇದು ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗುತ್ತಿದೆ. ಪೊಲೀಸರೇ ದರೋಡೆ, ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದಾರೆ. ರಕ್ಷಕರೇ ಭಕ್ಷಕರಾಗುತ್ತಿರುವ ಕಾರಣ ಪೊಲೀಸರ ಮೇಲೆ ಜನ ವಿಶ್ವಾಸವನ್ನೇ ಕಳೆದುಕೊಳ್ಳುತ್ತಿದ್ದಾರೆ ಎಂದಿದ್ದಾರೆ. ಜೊತೆಗೆ ಅಪರಾಧ ಪ್ರಕರಣದಲ್ಲಿ ಭಾಗಿಯಾದ ಪೊಲೀಸರನ್ನು ಅಮಾನತು ಮಾಡುವುದಲ್ಲ, ಕೆಲಸದಿಂದಲೇ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಶರವಣ ಅವರ ಮಾತಿಗೆ ಉತ್ತರಿಸಿದ ಗೃಹ ಸಚಿವರು, ಎಲ್ಲಾ ಪೊಲೀಸರು ಕಳ್ಳರು ಎನ್ನಲು ಸಾಧ್ಯವಿಲ್ಲ. ಬೇಲಿಯೇ ಎದ್ದು ಹೊಲ ಮೇಯ್ತು, ರಕ್ಷಕರು ಭಕ್ಷಕರೆಂದು ಹೇಳಿದ್ರಿ. ಆದರೆ ಅಪರಾಧ ಕೃತ್ಯಗಳಲ್ಲಿ ಪೊಲೀಸರು ಶಾಮೀಲಾಗಿದ್ರೆ ಸುಮ್ಮನೆ ಬಿಡಲ್ಲ. ಅಂಥವರ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮಕೈಗೊಂಡಿದ್ದೇವೆ ಎಂದರು.