ರಾಯಚೂರು, ಜ. 03 (DaijiworldNews/AA): ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸಂಗ್ರಹಿಸಿ ರಾಯಚೂರಿನಲ್ಲಿ ಗೃಹಿಣಿಯೊಬ್ಬರು ಫ್ರಿಡ್ಜ್ ಖರೀದಿ ಮಾಡಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಉಪ್ಪಲದೊಡ್ಡಿ ಗ್ರಾಮದ ನಿವಾಸಿ ಹನುಮಮ್ಮ ನಡುಲಮನಿ ಅವರು, ಸರ್ಕಾರದಿಂದ ಪ್ರತಿ ತಿಂಗಳು ದೊರೆಯುತ್ತಿದ್ದ ಗೃಹಲಕ್ಷ್ಮಿ ಯೋಜನೆಯ 2,000 ರೂ. ಹಣವನ್ನು ಸಂಗ್ರಹ ಮಾಡಿ ಫ್ರಿಡ್ಜ್ ಖರೀದಿಸಿದ್ದಾರೆ. ಹನುಮಮ್ಮ ಅವರು ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ ಒಟ್ಟು 23 ಕಂತುಗಳ ಹಣವನ್ನು ಪಡೆದಿದ್ದು, ಆ ಹಣವನ್ನು ಕೂಡಿಟ್ಟು, ಇದೀಗ 17,000 ರೂ. ವೆಚ್ಚದಲ್ಲಿ ಫ್ರಿಡ್ಜ್ ಖರೀದಿಸಿದ್ದಾರೆ.
ಫ್ರಿಡ್ಜ್ ಖರೀದಿಸಿದ ಬಳಿಕ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಬದುಕಿನಲ್ಲಿ ದೊಡ್ಡ ಬದಲಾವಣೆ ತಂದಿದೆ ಎಂದು ಹೇಳಿದ್ದಾರೆ. ಜೊತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.