ಬೆಂಗಳೂರು, ಮಾ. 04 (DaijiworldNews/AA): ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮೀಸಲಾತಿ ಪ್ರಮಾಣವನ್ನು ಶೇ.50 ರಿಂದ ಶೇ.56ಕ್ಕೆ ಏರಿಸಿದ್ದಾರೆ. ನೀವು 50,000 ಖಾಲಿ ಹುದ್ದೆ ಭರ್ತಿ ಮಾಡುತ್ತೀರಾ ಅಥವಾ 1 ಲಕ್ಷ ಹುದ್ದೆ ಭರ್ತಿ ಮಾಡುವಿರಾ ಎಂಬುದು ನಿಮಗೆ ಬಿಟ್ಟಿದ್ದು. ಎಲ್ಲ ಖಾಲಿ ಹುದ್ದೆ ಭರ್ತಿ ಮಾಡಿ ಎಂಬ ಆಗ್ರಹ ನಮ್ಮದು. ಶೇ.56 ಒಳಮೀಸಲಾತಿ ನೀಡಿ ಬಿಜೆಪಿ ಸರ್ಕಾರವು ಎಲ್ಲ ಸಮುದಾಯಗಳಿಗೆ ನ್ಯಾಯ ಕೊಡುವ ಕೆಲಸ ಮಾಡಿದೆ. ಅದರ ಆಧಾರದಡಿ ಶೋಷಿತ- ಪೀಡಿತ ಸಮುದಾಯಗಳಿಗೆ ಒಳಮೀಸಲಾತಿ ಪರಿಗಣಿಸಿ ಈ ಹುದ್ದೆಗಳನ್ನು ಭರ್ತಿ ಮಾಡಬೇಕು" ಎಂದು ತಿಳಿಸಿದರು.
"ಮುಖ್ಯಮಂತ್ರಿಗಳೇ ಪದೇ ಪದೇ ಈ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದ್ದೀರಿ. ಪರಿಶಿಷ್ಟ ಜಾತಿ- ಪಂಗಡಗಳ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ ರಾಜ್ಯ ನ್ಯಾಯಾಲಯದ ಕುಂಟುನೆಪ ಹೇಳದೆ ಈ ಸಮುದಾಯಗಳಿಗೆ ಉದ್ಯೋಗ ನೀಡಿ ನ್ಯಾಯ ಕೊಡಿ. ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ- ಪಂಗಡಗಳ ಯುವಜನತೆ ಸೇರಿ ಎಲ್ಲ ವರ್ಗಗಳ ಜನರಿಗೆ ನ್ಯಾಯ ಕೊಡುವ ಕೆಲಸ ಮಾಡಿ. ಅದನ್ನು ಬಿಟ್ಟು ಈ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿಗಳು ತೊಟ್ಟಿಲು ತೂಗುವ ಜೊತೆಗೆ ಮಗುವನ್ನು ಚಿವುಟುವ ಕೆಲಸ ಮಾಡುತ್ತಿದ್ದು, ಇದು ಅಕ್ಷಮ್ಯ ಅಪರಾಧ. ಹಳೆಯ ಮೀಸಲಾತಿ ಪ್ರಮಾಣದಡಿ ನೇಮಕಾತಿ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರವು ರಾಜ್ಯದಲ್ಲಿ ಬೆಂಕಿ ಹಚ್ಚಲು ಹೊರಟಂತಿದೆ" ಎಂದು ಹೇಳಿದರು.
"ನೀವೆಷ್ಟು ದಿನ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿರುತ್ತೀರೆಂಬುದು ನಮಗೆ ತಿಳಿದಿಲ್ಲ. ಆದರೆ, ಯಾವ ಅಹಿಂದ ಸಮುದಾಯದ ಅಧಿಕಾರ ಹಿಡಿದ ಮುಖ್ಯಮಂತ್ರಿಗಳೇ ಆ ಸಮುದಾಯದ ತಾಳ್ಮೆಯನ್ನು ಪರೀಕ್ಷೆ ಮಾಡದಿರಿ. ಶೋಷಿತ- ಪೀಡಿತ ಸಮುದಾಯಗಳನ್ನು ಕೆಣಕದಿರಿ. ಒಳ ಮೀಸಲಾತಿ ಜಾರಿ ಮಾಡದೇ ಖಾಲಿ ಹುದ್ದೆ ಭರ್ತಿ ಮಾಡುವ ಕೆಲಸ ಮಾಡಿದರೆ, ರಾಜ್ಯದಲ್ಲಿ ಮುಂದೆ ಆಗುವ ಘಟನೆಗಳಿಗೆ ತಾವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು. ಇದೆಲ್ಲವನ್ನು ಪರಿಗಣಿಸಿ ಸಮರ್ಪಕ ನಿರ್ಧಾರವನ್ನು ಮುಖ್ಯಮಂತ್ರಿಗಳು ಮಾಡಬೇಕೆಂದು ಮನವಿ ಮಾಡಿದರು. ಯುವಜನತೆ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ವಯೋಮಿತಿ ಮೀರುತ್ತಿದೆ. ಅವರ ಸಹನೆಯ ಕಟ್ಟೆ ಒಡೆದು ಹೋಗಿದೆ. ಇದನ್ನು ಕೂಡ ಪರಿಗಣಿಸಿ ನ್ಯಾಯ ಕೊಡುವ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ತಮ್ಮ ಗೌರವ ಉಳಿಸಿಕೊಳ್ಳಬೇಕು" ಎಂದರು.