ಶಿವಮೊಗ್ಗ, ಮೇ. 27 (DaijiworldNews/AA): ಸಿದ್ದರಾಮಯ್ಯ ಬಿಟ್ಟು ಯಾರೇ ಮುಖ್ಯಮಂತ್ರಿ ಆದರೂ ಅದು ತಾತ್ಕಾಲಿಕ. ರಾಜ್ಯದಲ್ಲಿ ಅವಧಿ ಪೂರ್ಣ ಚುನಾವಣೆ ಬಂದೇ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ಮುಖ್ಯಮಂತ್ರಿಗಳನ್ನು ಬದಲಿಸಲು ಮುಂದಾಗಿರುವ ಕುರಿತು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕೊನೆಗೂ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ರಾಜ್ಯ ಸರ್ಕಾರದ ವೈಫಲ್ಯ ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳನ್ನು ಬದಲಾಯಿಸಲು ಮುಂದಾಗಿದೆ. ಇದು ಇಡೀ ದೇಶದಲ್ಲಿ ಕಾಂಗ್ರೆಸ್ ಅವನತಿಗೆ ಮುನ್ಸೂಚನೆಯಾಗಿದೆ. ನಿನ್ನೆ ದೆಹಲಿಯಲ್ಲಿ 5 ಗಂಟೆಗಳ ಕಾಲ ಮ್ಯಾರಾಥಾನ್ ಸಭೆ ನಡೆದಿದೆ. ಸಭೆಯ ಕೊನೆಗೆ ಮುಖ್ಯಮಂತ್ರಿ ರಾಜಿನಾಮೆಗೆ ನಿರ್ಧಾರವಾಗಿದೆ. ಭ್ರಷ್ಟಾಚಾರದ ವೈಫಲ್ಯ ಹೊಂದಿದ ಆರೋಪವಿರುವ ಸಿದ್ದರಾಮಯ್ಯನವರ ರಾಜೀನಾಮೆಗೆ ಹೈಕಮಾಂಡ್ ಅನುಮೋದಿಸಿದೆ" ಎಂದರು.
"ಸಿದ್ದರಾಮಯ್ಯನವರು ರಾಜೀನಾಮೆ ನೀಡಿ ಯಾರೇ ಮುಖ್ಯಮಂತ್ರಿಯಾದರೂ ಅದರ ಆಯ್ಕೆ ಅಷ್ಟು ಸಲೀಸಾಗಿ ಆಗುವುದಿಲ್ಲ. ರಾಜ್ಯ ಸರ್ಕಾರದಲ್ಲಿ ಗೊಂದಲ ಶುರುವಾಗಲಿದೆ. ಯಾರು ಮುಖ್ಯಮಂತ್ರಿ ಆಗುತ್ತಾರೆ ಎನ್ನುವುದು ಮುಖ್ಯವಲ್ಲ. ಕೊನೆಗೂ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ರಾಜ್ಯ ಸರ್ಕಾರದ ವೈಫಲ್ಯ ಒಪ್ಪಿಕೊಂಡಿದೆ. ದೇಶದಲ್ಲಿ ಕಾಂಗ್ರೆಸ್ ಅವನತಿ ಶುರುವಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಳಿಕ ಕರ್ನಾಟಕದಲ್ಲೂ ಕೂಡ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಲಿದೆ" ಎಂದು ಹೇಳಿದರು.
"ಸಿದ್ದರಾಮಯ್ಯ ಬದಲು ಯಾರು ಸಿಎಂ ಆಗುತ್ತಾರೆ ಎನ್ನುವುದು ಮುಖ್ಯವಲ್ಲ. ಸಿದ್ದರಾಮಯ್ಯ ಅತಿಹೆಚ್ಚು ಅನುಭವವಿರುವ ಮುಖ್ಯಮಂತ್ರಿ. ಆದರೂ ಸಿದ್ದರಾಮಯ್ಯ ಅವಧಿಯಲ್ಲಿ ಹತ್ತು ಲಕ್ಷ ಕೋಟಿ ರೂ. ಸಾಲವಾಗಿದೆ. ಆಂತರಿಕ ಕಚ್ಚಾಟದಿಂದ ಆಡಳಿತ ಸಂಪೂರ್ಣ ಕುಸಿದು ಹೋಗಿದೆ. ವಾಲ್ಮೀಕಿ, ಮೂಡಾ ಹೀಗೆ ಹಲವು ಇಲಾಖೆಯಲ್ಲಿ ಭ್ರಷ್ಟಾಚಾರ ಆಗಿದೆ. ಸರ್ಕಾರಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡ ಏಕೈಕ ರಾಜ್ಯ ಕರ್ನಾಟಕವಾಗಿದೆ. ಒಟ್ಟಾರೆ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದ ರಾಜ್ಯ ಸರ್ಕಾರವನ್ನು ಬದಲಾಯಿಸಲು ಕಾಂಗ್ರೆಸ್ ಹೈಕಮಾಂಡ್ ಹೊರಟಿದೆ" ಎಂದು ವಾಗ್ದಾಳಿ ನಡೆಸಿದರು.