ಭೋಪಾಲ್, ಮೇ. 28 (DaijiworldNews/AK): ಮಾಡೆಲ್ ಹಾಗೂ ನಟಿ ತ್ವಿಶಾ ಶರ್ಮಾ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಅತ್ತೆ ಹಾಗೂ ನಿವೃತ್ತ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸುವ ಹಾಗೂ ತನಿಖೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಅವರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ಮಧ್ಯಪ್ರದೇಶ ಹೈಕೋರ್ಟ್ ರದ್ದುಪಡಿಸಿದೆ.

33 ವರ್ಷದ ತ್ವಿಶಾ ಶರ್ಮಾ 2025ರ ಡಿಸೆಂಬರ್ 9ರಂದು ವಕೀಲ ಸಮರ್ಥ್ ಸಿಂಗ್ರನ್ನು ಮದುವೆಯಾಗಿದ್ದರು. ಮದುವೆಯಾದ ಐದು ತಿಂಗಳಲ್ಲೇ, 2026ರ ಮೇ 12ರಂದು ಭೋಪಾಲ್ನಲ್ಲಿರುವ ಪತಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೇವನಾರಾಯಣ ಮಿಶ್ರಾ, ಕೆಳ ನ್ಯಾಯಾಲಯವು ಪ್ರಮುಖ ಸಾಕ್ಷ್ಯಗಳನ್ನು ಪರಿಗಣಿಸದೇ ಜಾಮೀನು ನೀಡಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಾಟ್ಸಾಪ್ ಚಾಟ್ಗಳು ಮತ್ತು ಸಾಕ್ಷಿದಾರರ ಹೇಳಿಕೆಗಳ ಪ್ರಕಾರ, ತ್ವಿಶಾಳಿಗೆ ಗರ್ಭಧಾರಣೆ ವಿಚಾರವಾಗಿ ಮಾನಸಿಕ ಕಿರುಕುಳ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಗರ್ಭದಲ್ಲಿದ್ದ ಮಗುವಿನ ಪಿತೃತ್ವದ ಬಗ್ಗೆ ಪತಿ ಮತ್ತು ಮನೆಯವರು ಅನುಮಾನ ವ್ಯಕ್ತಪಡಿಸಿದ್ದರ ಜೊತೆಗೆ ಗರ್ಭಪಾತಕ್ಕೆ ಒತ್ತಡ ಹೇರಲಾಗುತ್ತಿತ್ತು ಎಂದು 17 ಪುಟಗಳ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಪ್ರಕರಣದ ಗಂಭೀರತೆ, ವರದಕ್ಷಿಣೆ ಕಿರುಕುಳ, ಗರ್ಭಪಾತದ ಒತ್ತಡ ಹಾಗೂ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇರುವುದರಿಂದ ನಿರೀಕ್ಷಣಾ ಜಾಮೀನು ಮುಂದುವರಿಸಲು ಸಾಧ್ಯವಿಲ್ಲ ಎಂದು ಹೇಳಿದ ಹೈಕೋರ್ಟ್, ಮೇ 15ರಂದು ನೀಡಲಾಗಿದ್ದ ಜಾಮೀನನ್ನು ರದ್ದುಪಡಿಸಿದೆ.