ವಿಶಾಖಪಟ್ಟಣಂ,ಜೂ. 09 (DaijiworldNews/TA): ಆಂಧ್ರಪ್ರದೇಶದ ವಿಶಾಖಪಟ್ಟಣಂದಲ್ಲಿರುವ ರಾಷ್ಟ್ರೀಯ ಇಸ್ಪಾತ್ ನಿಗಮ್ ಲಿಮಿಟೆಡ್ (RINL) ಉಕ್ಕು ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಎಂಟು ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಮಾಹಿತಿಯ ಪ್ರಕಾರ, ಕಾರ್ಖಾನೆಯ ಕಂಟಿನ್ಯೂಯಸ್ ಕ್ಯಾಸ್ಟಿಂಗ್ ಯಂತ್ರದ ಕಾರ್ಯಾಚರಣೆಯ ವೇಳೆ ಕರಗಿದ ಕಬ್ಬಿಣವನ್ನು ಸಾಗಿಸುತ್ತಿದ್ದ ಲ್ಯಾಡಲ್ನಲ್ಲಿ ಸ್ಫೋಟ ಸಂಭವಿಸಿದೆ. ಸುಮಾರು 22 ಲ್ಯಾಡಲ್ಗಳ ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ಮುಂದಿನ ಲ್ಯಾಡಲ್ ಅನ್ನು ಸಂಪರ್ಕಿಸುವ ಸಂದರ್ಭದಲ್ಲಿ ಏಕಾಏಕಿ ಸ್ಫೋಟ ಉಂಟಾಗಿದೆ ಎಂದು ತಿಳಿದುಬಂದಿದೆ.
ಸ್ಫೋಟದ ಪರಿಣಾಮ ಲ್ಯಾಡಲ್ನ ಮೇಲ್ಭಾಗದಿಂದ ಬಿಸಿ ಲೋಹ ಸುತ್ತಮುತ್ತ ಚಿಮ್ಮಿದ್ದು, ಸಮೀಪದಲ್ಲಿದ್ದ ಕಾರ್ಮಿಕರು ಅದರ ಕೆನ್ನಾಲಿಗೆಗೆ ಸಿಲುಕಿದ್ದಾರೆ. ಘಟನೆಯ ತೀವ್ರತೆಗೆ ಕ್ರೇನ್ ಸೇರಿದಂತೆ ಕೆಲವು ಯಂತ್ರೋಪಕರಣಗಳಿಗೂ ಹಾನಿಯಾಗಿದೆ ಎಂದು ವರದಿಯಾಗಿದೆ. ಪ್ರಾಥಮಿಕ ತನಿಖೆಯಲ್ಲಿ, ಲೋಹದ ಮಟ್ಟವನ್ನು ನಿಯಂತ್ರಿಸುವ ಸ್ಲೈಡ್ ಗೇಟ್ ವ್ಯವಸ್ಥೆಯಲ್ಲಿ ಉಂಟಾದ ತಾಂತ್ರಿಕ ದೋಷವೇ ಸ್ಫೋಟಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ, ದುರಂತದ ನಿಖರ ಕಾರಣವನ್ನು ಪತ್ತೆಹಚ್ಚಲು ಅಧಿಕಾರಿಗಳು ಸಮಗ್ರ ತನಿಖೆ ಆರಂಭಿಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರು ಮೃತ ಕಾರ್ಮಿಕರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು. ಈ ಪರಿಹಾರವು ಕಾಯಂ ನೌಕರರು ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ನೌಕರರ ಕುಟುಂಬಗಳಿಗೂ ಅನ್ವಯವಾಗಲಿದೆ ಎಂದು ಅವರು ತಿಳಿಸಿದರು.
ಇದರೊಂದಿಗೆ, ಮೃತ ಕಾರ್ಮಿಕರ ಕುಟುಂಬದ ಒಬ್ಬ ಸದಸ್ಯರಿಗೆ ಕಾಯಂ ಉದ್ಯೋಗ ನೀಡಲಾಗುವುದು ಎಂದು ಭರವಸೆ ನೀಡಲಾಗಿದೆ. ಅಲ್ಲದೆ, ಉಕ್ಕು ಸ್ಥಾವರದ ಟೌನ್ಶಿಪ್ನಲ್ಲಿ ವಾಸವಿದ್ದ ಕುಟುಂಬಗಳು ಅದೇ ಮನೆಯಲ್ಲಿ ಮುಂದುವರಿಯಲು ಅವಕಾಶ ಕಲ್ಪಿಸಲಾಗುವುದು ಹಾಗೂ ಕುಟುಂಬದ ಎಲ್ಲಾ ಮಕ್ಕಳಿಗೆ ಉಚಿತ ಶಿಕ್ಷಣ ಒದಗಿಸಲಾಗುವುದು ಎಂದು ಘೋಷಿಸಲಾಗಿದೆ.
ಇದೇ ವೇಳೆ, ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ನೆರವು ನೀಡಲಾಗುವುದು ಎಂದು ಘೋಷಿಸಲಾಗಿದೆ. ವಿಮೆ ಸೇರಿದಂತೆ ವಿವಿಧ ಮೂಲಗಳಿಂದ ದೊರೆಯುವ ಪರಿಹಾರವನ್ನು ಸೇರಿಸಿದರೆ ಪ್ರತಿ ಕುಟುಂಬಕ್ಕೆ ಒಟ್ಟು ಸುಮಾರು 38 ಲಕ್ಷ ರೂಪಾಯಿ ಲಭ್ಯವಾಗುವ ನಿರೀಕ್ಷೆಯಿದೆ.
ದುರಂತದ ಬಳಿಕ ಕಾರ್ಮಿಕರೊಂದಿಗೆ ಹಾಗೂ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ ಕುಮಾರಸ್ವಾಮಿ ಅವರು, ಘಟನೆಯಿಂದ ಉಂಟಾದ ನೋವನ್ನು ಅರ್ಥಮಾಡಿಕೊಂಡಿದ್ದರೂ, ಉಕ್ಕು ಘಟಕದ ಪುನಶ್ಚೇತನ ಮತ್ತು ಕಾರ್ಯಾಚರಣೆಗೆ ಅಡ್ಡಿಯಾಗದಂತೆ ಸಹಕರಿಸುವಂತೆ ಕಾರ್ಮಿಕ ಮುಖಂಡರಲ್ಲಿ ಮನವಿ ಮಾಡಿದರು.
ಈ ದುರ್ಘಟನೆ ಬಳಿಕ ಕಾರ್ಖಾನೆಯಲ್ಲಿನ ಸುರಕ್ಷತಾ ಕ್ರಮಗಳ ಕುರಿತು ಗಂಭೀರ ಪ್ರಶ್ನೆಗಳು ಎದ್ದಿದ್ದು, ಕಾರ್ಮಿಕರ ಸುರಕ್ಷತೆಯನ್ನು ಖಚಿತಪಡಿಸಲು ಕಟ್ಟುನಿಟ್ಟಿನ ಕ್ರಮಗಳ ಅಗತ್ಯತೆ ಮತ್ತೊಮ್ಮೆ ಚರ್ಚೆಗೆ ಬಂದಿದೆ. ತನಿಖೆಯ ವರದಿ ಬಳಿಕ ಘಟನೆಯ ನಿಖರ ಕಾರಣ ಹಾಗೂ ಹೊಣೆಗಾರಿಕೆ ಕುರಿತು ಹೆಚ್ಚಿನ ಮಾಹಿತಿ ಹೊರಬೀಳುವ ನಿರೀಕ್ಷೆಯಿದೆ.