ಬೆಂಗಳೂರು, ಜೂ. 28 (DaijiworldNews/TA): ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭಾನುವಾರ ಅಧಿಕೃತ ಚಾಲನೆ ನೀಡಿದರು.

ಬೆಂಗಳೂರಿನ ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಟ್ಟ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ರಾಜ್ಯ ಮಟ್ಟದ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ, ದೇಶದಲ್ಲಿ ಪೋಲಿಯೋ ನಿರ್ಮೂಲನೆಗೆ 1972ರಲ್ಲೇ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಮುನ್ನುಡಿ ಬರೆದಿದ್ದರು ಎಂದು ಸ್ಮರಿಸಿದರು.
"ಮಕ್ಕಳ ಭವಿಷ್ಯ ಸುರಕ್ಷಿತವಾಗಿರಬೇಕು ಎಂಬ ದೂರದೃಷ್ಟಿಯಿಂದ ಪೋಲಿಯೋ ಲಸಿಕೆ ನೀಡಲಾಗುತ್ತಿದೆ. ನಮ್ಮ ನೆರೆಯ ಕೆಲವು ದೇಶಗಳಲ್ಲಿ ಇಂದಿಗೂ ಪೋಲಿಯೋ ಸಮಸ್ಯೆ ಇದೆ. ಆದರೆ ನಮ್ಮ ದೇಶದಲ್ಲಿ ಅದು ಮತ್ತೆ ಕಾಣಿಸಿಕೊಳ್ಳದಂತೆ ಪ್ರತಿಯೊಬ್ಬರೂ ಜಾಗರೂಕರಾಗಬೇಕು" ಎಂದು ಅವರು ಹೇಳಿದರು.
ಮುಖ್ಯಮಂತ್ರಿ, ರಾಜ್ಯದ ಪ್ರತಿಯೊಂದು ಮಗುವಿಗೂ ಪೋಲಿಯೋ ಲಸಿಕೆ ತಲುಪಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ತಿಳಿಸಿದರು. ವಿಶೇಷವಾಗಿ ಗ್ರಾಮೀಣ, ಗುಡ್ಡಗಾಡು ಹಾಗೂ ದುರ್ಗಮ ಪ್ರದೇಶಗಳಲ್ಲಿರುವ ಮಕ್ಕಳಿಗೂ ಲಸಿಕೆ ತಲುಪುವಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ ಎಂದರು.
ಪೋಷಕರು ತಮ್ಮ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿ ಉಪಸ್ಥಿತರಿದ್ದು, ರಾಜ್ಯದಾದ್ಯಂತ ನಡೆಯುತ್ತಿರುವ ಪಲ್ಸ್ ಪೋಲಿಯೋ ಅಭಿಯಾನವನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಸಹಕರಿಸುವಂತೆ ಸರ್ಕಾರ ಮನವಿ ಮಾಡಿದೆ.