ಶಿವಮೊಗ್ಗ, ಜೂ. 28 (DaijiworldNews/TA): ಶಿಕಾರಿಪುರದಿಂದ ಮಂಗಳೂರಿಗೆ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಯೊಂದರಲ್ಲಿ ಚಲಿಸುತ್ತಿರುವಾಗಲೇ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಲಾರಿಯ ಮುಂಭಾಗ ಸಂಪೂರ್ಣ ಸುಟ್ಟುಹೋದ ಘಟನೆ ತಾಲೂಕಿನ ನಿಟ್ಟೂರು ಸಮೀಪದ ಬೇಳೂರು ಗ್ರಾಮದಲ್ಲಿ ನಡೆದಿದೆ.

ಬೆಂಕಿ ಕಾಣಿಸಿಕೊಂಡ ಕೂಡಲೇ ವಾಹನ ಚಾಲಕ ಮಹಮ್ಮದ್ ಹುಸೇನ್ ಸಮಯಪ್ರಜ್ಞೆಯಿಂದ ಲಾರಿಯನ್ನು ರಸ್ತೆ ಬದಿಗೆ ನಿಲ್ಲಿಸಿ ಹೊರಬಂದಿದ್ದು, ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿದ್ದು, ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಅಷ್ಟರಲ್ಲಾಗಲೇ ಲಾರಿಯ ಮುಂಭಾಗ ಸಂಪೂರ್ಣ ಬೆಂಕಿಗಾಹುತಿಯಾಗಿತ್ತು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
ಪ್ರಾಥಮಿಕ ಮಾಹಿತಿಯಂತೆ ಇಸಿಎಂ (ECM) ದೋಷದಿಂದ ಇಂಜಿನ್ಗೆ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆಯಾದರೂ, ತನಿಖೆ ಪೂರ್ಣಗೊಂಡ ನಂತರವೇ ಬೆಂಕಿಗೆ ನಿಖರ ಕಾರಣ ತಿಳಿಯಲಿದೆ ಎಂದು ನಗರ ಪೊಲೀಸ್ ಠಾಣೆಯ ಪಿಎಸ್ಐ ಕೋಳಿವಾಡ ತಿಳಿಸಿದ್ದಾರೆ.