ಬೆಂಗಳೂರು, ಜು. 10 (DaijiworldNews/TA): ರಾಜ್ಯದ ಪ್ರಮುಖ ಮುಜರಾಯಿ ದೇವಸ್ಥಾನಗಳ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಎ, ಬಿ ಹಾಗೂ ಸಿ ವರ್ಗದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಅಧಿಕಾರಿಗಳಿಗೆ ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮುಜರಾಯಿ ಇಲಾಖೆಯ ಉನ್ನತ ಮಟ್ಟದ ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ, ದೇವಸ್ಥಾನಗಳ ಆಸ್ತಿಪಾಸ್ತಿಗಳ ಸುರಕ್ಷತೆ ಹಾಗೂ ಭಕ್ತರ ಧಾರ್ಮಿಕ ಭಾವನೆಗಳ ರಕ್ಷಣೆಗೆ ಸರ್ಕಾರ ಅತ್ಯುನ್ನತ ಆದ್ಯತೆ ನೀಡಲಿದೆ ಎಂದು ತಿಳಿಸಿದ್ದಾರೆ. ಹೊಸ ಮಾರ್ಗಸೂಚಿಗಳ ಪ್ರಕಾರ ದೇವಸ್ಥಾನಗಳ ಪ್ರವೇಶ ದ್ವಾರ, ಗರ್ಭಗುಡಿ ಆವರಣ, ಕಾಣಿಕೆ ಹುಂಡಿ ಇರುವ ಸ್ಥಳ ಹಾಗೂ ಪ್ರಸಾದ ವಿತರಣಾ ಕೇಂದ್ರಗಳಲ್ಲಿ ಅತ್ಯಾಧುನಿಕ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ದೇವಸ್ಥಾನದ ಪ್ರಮುಖ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸುವ ವ್ಯವಸ್ಥೆ ರೂಪಿಸಲಾಗುತ್ತಿದೆ.
ಭಕ್ತರಿಗೆ ವಿತರಿಸುವ ಪ್ರಸಾದದ ಪಾವಿತ್ರ್ಯತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ವಿಶೇಷ ಕ್ರಮ ಕೈಗೊಳ್ಳಲಾಗುವುದು. ಪ್ರಸಾದ ವಿತರಣಾ ಕೇಂದ್ರಗಳಲ್ಲಿ ಅಗತ್ಯವಿರುವಷ್ಟು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವಂತೆ ಸೂಚಿಸಲಾಗಿದೆ. ಅದೇ ರೀತಿ, ಕಾಣಿಕೆ ಹುಂಡಿಗಳ ಸುರಕ್ಷತೆಯನ್ನು ಹೆಚ್ಚಿಸಲು ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗಿದ್ದು, ಹುಂಡಿ ತೆರೆಯುವ ಹಾಗೂ ಎಣಿಕೆ ಪ್ರಕ್ರಿಯೆಯನ್ನು ಸಿಸಿಟಿವಿ ಕ್ಯಾಮೆರಾಗಳ ನಿಗಾದಲ್ಲಿಯೇ ನಡೆಸುವಂತೆ ನಿರ್ದೇಶನ ನೀಡಲಾಗಿದೆ.
ದೇವಸ್ಥಾನಗಳ ಆಡಳಿತ ಮಂಡಳಿಗಳು ಸ್ಥಳೀಯ ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ರಾತ್ರಿ ವೇಳೆ ಗಸ್ತು ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ. ಯಾವುದೇ ದೇವಸ್ಥಾನದಲ್ಲಿ ಭದ್ರತಾ ಲೋಪ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಚಾಮುಂಡೇಶ್ವರಿ ದೇವಸ್ಥಾನ ಹಾಗೂ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ ಲಕ್ಷಾಂತರ ಭಕ್ತರು ಭೇಟಿ ನೀಡುವ ದೇವಸ್ಥಾನಗಳಲ್ಲಿ ಈ ಭದ್ರತಾ ಕ್ರಮಗಳನ್ನು ತಕ್ಷಣದಿಂದಲೇ ಜಾರಿಗೆ ತರಲಾಗುವುದು ಎಂದು ಸರ್ಕಾರ ತಿಳಿಸಿದೆ.