ನವದೆಹಲಿ,ಜು. 11 (DaijiworldNews/AK): ರಾಷ್ಟ್ರಗೀತೆಯಾದ ಜನಗಣಮನ ಮತ್ತು ರಾಷ್ಟ್ರೀಯ ಗೀತೆಯಾದ ವಂದೇ ಮಾತರಂ ಕುರಿತಾಗಿ ಕೆಲವು ಮಹತ್ವದ ಆದೇಶಗಳನ್ನು ಹೊರಡಿಸಿದೆ.ಸರ್ಕಾರಿ ಅಧಿಕೃತ ಕಾರ್ಯಕ್ರಮಗಳಲ್ಲಿ ವಿವಿಧ ಗೀತೆಗಳನ್ನು ಹಾಡುವ ಅಥವಾ ನುಡಿಸುವ ಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಈ ಸ್ಪಷ್ಟನೆಯನ್ನು ನೀಡಿದೆ. ಇನ್ನು ಮುಂದೆ ಯಾವುದೇ ಸರ್ಕಾರಿ ಕಾರ್ಯಕ್ರಮಗಳಲ್ಲಿ ಮೊದಲು ವಂದೇ ಮಾತರಂ ಹಾಡಬೇಕು ಅಥವಾ ಪ್ಲೇ ಮಾಡಬೇಕು. ಅದರ ನಂತರ ರಾಷ್ಟ್ರಗೀತೆಯಾದ ಜನಗಣಮನ ಗೀತೆಯನ್ನು ಹಾಡಬೇಕು ಎಂದು ಆದೇಶಿಸಲಾಗಿದೆ

ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಮೊದಲು ರಾಜ್ಯ ಗೀತೆಯನ್ನು ಹಾಡಿ, ನಂತರ ರಾಷ್ಟ್ರೀಯ ಗೀತೆ ಮತ್ತು ರಾಷ್ಟ್ರಗೀತೆಯನ್ನು ಹಾಡಬೇಕು. ಕರ್ನಾಟಕದಲ್ಲಾದರೆ ಜೈ ಭಾರತ ಜನನಿಯ ತನುಜಾತೆ ಹಾಡಿದ ಬಳಿಕವೇ ವಂದೇ ಮಾತರಂ ಮತ್ತು ಜನಗಣಮನ ಗೀತೆಯನ್ನು ಹಾಡಬೇಕು ಎಂದು ಸೂಚಿಸಲಾಗಿದೆ.
ಕೇಂದ್ರ ಗೃಹ ಸಚಿವಾಲಯದ ಈ ನೂತನ ಆದೇಶವನ್ನು ಎಲ್ಲಾ ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಸಚಿವಾಲಯಗಳಿಗೆ ಕಳುಹಿಸಲಾಗಿದ್ದು, ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಇದರ ಜೊತೆಗೆ ರಾಷ್ಟ್ರಗೀತೆಯನ್ನು ಹಾಡುವಾಗ ಅನುಸರಿಸಬೇಕಾದ ಕೆಲವು ನಿಯಮಗಳನ್ನು ಕೂಡ ಸೂಚಿಸಲಾಗಿದೆ.
ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಬಳಿಕವೇ ರಾಷ್ಟ್ರಗೀತೆಯನ್ನು ಹಾಕಬೇಕು. ಯಾವಾಗಲೆಲ್ಲಾ ರಾಷ್ಟ್ರೀಯ ಗೀತೆ ಮತ್ತು ರಾಷ್ಟ್ರಗೀತೆಯನ್ನು ಬಳಸಲಾಗುತ್ತದೆಯೋ, ಆಗ ರಾಷ್ಟ್ರೀಯ ಗೀತೆ ಮತ್ತು ರಾಷ್ಟ್ರಗೀತೆ ಎರಡನ್ನೂ ಜೊತೆಯಾಗಿಯೇ ಪ್ಲೇ ಮಾಡಬೇಕು. ಆದರೆ ಮೊದಲು ರಾಷ್ಟ್ರೀಯ ಗೀತೆ ಬರಬೇಕು, ನಂತರವೇ ರಾಷ್ಟ್ರಗೀತೆ ಬರಬೇಕು” ಎಂದು ಗೃಹ ಸಚಿವಾಲಯ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಕೇಂದ್ರ ಸರ್ಕಾರವು ಈ ಆದೇಶದಲ್ಲಿ ಕೇವಲ ಕ್ರಮವನ್ನು ಮಾತ್ರವಲ್ಲದೆ, ಗೀತೆಗಳನ್ನು ಹಾಡುವ ಗುಣಮಟ್ಟದ ಕಡೆಗೂ ಗಮನ ಹರಿಸಿದೆ. ರಾಷ್ಟ್ರೀಯ ಗೀತೆ ಮತ್ತು ರಾಷ್ಟ್ರಗೀತೆಯನ್ನು ಹಾಡುವಾಗ ಅಥವಾ ನುಡಿಸುವಾಗ ಅದರ ಮೂಲ ಸಾಹಿತ್ಯ ಹಾಗೂ ಉಚ್ಚಾರಣೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇದರಲ್ಲಿ ಯಾವುದೇ ತಪ್ಪುಗಳಾಗಬಾರದು ಎಂದು ಸರ್ಕಾರ ಹೇಳಿದೆ.
ಅಧಿಕಾರಿಗಳು ಮತ್ತು ಸಂಸ್ಥೆಗಳ ನೆರವಿಗಾಗಿ, ರಾಷ್ಟ್ರಗೀತೆ ಮತ್ತು ರಾಷ್ಟ್ರೀಯ ಗೀತೆಯ ಅಧಿಕೃತ ಸಾಹಿತ್ಯ ಹಾಗೂ ಅದರ ಸರಿಯಾದ ಉಚ್ಚಾರಣೆಯ ಮಾರ್ಗದರ್ಶನವನ್ನು ಗೃಹ ಸಚಿವಾಲಯದ ಅಧಿಕೃತ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿದೆ.
ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಹಾಗೂ ಸಂಘ-ಸಂಸ್ಥೆಗಳಿಗೆ ಈ ನೂತನ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಕ್ತ ನಿರ್ದೇಶನಗಳನ್ನು ನೀಡಬೇಕು ಎಂದು ಗೃಹ ಸಚಿವಾಲಯ ಸೂಚಿಸಿದೆ.