ನವದೆಹಲಿ,ಜು. 20 (DaijiworldNews/AK):ದೆಹಲಿಯ ಜಂತರ್ ಮಂತರ್ನಲ್ಲಿ ಕಳೆದ 21 ದಿನಗಳಿಂದ ಸತತ ನಿರಶನ ನಡೆಸುತ್ತಿರುವ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಲು ಕೇಂದ್ರ ಸರ್ಕಾರಕ್ಕೆ 3 ಪ್ರಮುಖ ಷರತ್ತುಗಳನ್ನು ವಿಧಿಸಿದ್ದಾರೆ.

ಆರೋಗ್ಯ ಸ್ಥಿತಿ ತೀವ್ರ ಕ್ಷೀಣಿಸಿದ ಹಿನ್ನೆಲೆಯಲ್ಲಿ ಶನಿವಾರ ದೆಹಲಿ ಪೊಲೀಸರು ವಾಂಗ್ಚುಕ್ ಅವರನ್ನು ಜಂತರ್ ಮಂತರ್ನಿಂದ ಸಫ್ದರ್ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಿದ್ದರು. ಪ್ರಸ್ತುತ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಮತ್ತು ಗ್ಲೂಕೋಸ್ ಸ್ವೀಕರಿಸಲು ನಿರಾಕರಿಸುತ್ತಿರುವ ಅವರು, ಸರ್ಕಾರ ತಮ್ಮ ಮೂರು ಬೇಡಿಕೆಗಳನ್ನು ಈಡೇರಿಸಿದರೆ ಮಾತ್ರ ಇಂದೇ (ಜುಲೈ 20) ನಿರಶನ ಹಿಂಪಡೆಯುವುದಾಗಿ ತಿಳಿಸಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಶುರುವಾಗುತ್ತಿದ್ದು, ದೇಶಾದ್ಯಂತ ಬಂದಿರುವ ವಿದ್ಯಾರ್ಥಿಗಳು ಮತ್ತು ಹೋರಾಟಗಾರರು ಸಂಸತ್ತಿನವರೆಗೆ ಶಾಂತಿಯುತ ಮೆರವಣಿಗೆ ನಡೆಸಲು ದೆಹಲಿ ಪೊಲೀಸರು ಅವಕಾಶ ನೀಡಬೇಕು.
ನೀಟ್ ಪರೀಕ್ಷೆ ಅಕ್ರಮ, ಪೇಪರ್ ಲೀಕ್ ಹಾಗೂ ಶಿಕ್ಷಣ ವ್ಯವಸ್ಥೆಯ ಸುಧಾರಣೆ ಕುರಿತು ಕೇಂದ್ರ ಶಿಕ್ಷಣ ಸಚಿವರು ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅಧಿಕೃತ ಲಿಖಿತ ಭರವಸೆ ನೀಡಬೇಕು. ಪ್ರತಿಭಟನೆ ಮತ್ತು ಹೋರಾಟದ ವೇಳೆ ದೆಹಲಿ ಹಾಗೂ ಇತರೆಡೆ ವಿದ್ಯಾರ್ಥಿ ಹೋರಾಟಗಾರರ ವಿರುದ್ಧ ದಾಖಲಿಸಿರುವ ಎಲ್ಲಾ ಎಫ್ಐಆರ್ಗಳನ್ನು ತಕ್ಷಣವೇ ಹಿಂಪಡೆಯಬೇಕು.
21 ದಿನಗಳ ನಿರಂತರ ಉಪವಾಸದಿಂದಾಗಿ ಸೋನಮ್ ವಾಂಗ್ಚುಕ್ ಅವರ ತೂಕ 8 ಕೆಜಿಗೂ ಹೆಚ್ಚು ಕಡಿಮೆಯಾಗಿದೆ. ರಕ್ತದಲ್ಲಿನ ಸಕ್ಕರೆ ಅಂಶ ಇಳಿಕೆಯಾಗಿದ್ದು, ನಿರ್ಜಲೀಕರಣ ಉಂಟಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.