ಮುಂಬೈ, ಜೂ. 09 (DaijiworldNews/AA): ಕಾಲ್ತುಳಿತದಂತಹ ಅಹಿತಕರ ಘಟನೆಗಳು ನಡೆದಾಗ ಭಾರತೀಯ ಕ್ರಿಕೆಟ್ ಮಂಡಳಿಯು 'ಮೂಕ ಪ್ರೇಕ್ಷಕರಾಗಿ' ಇರುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2026 ರಿಂದ ಬ್ಯಾನ್ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟಕ್ಕೆ ಏರಿದೆ. ಆರ್ಸಿಬಿ ಚೊಚ್ಚಲ ಬಾರಿ ಕಪ್ ಗೆದ್ದ ಬೆನ್ನಲ್ಲೇ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಯೋಜಿಸಲಾಗಿತ್ತು. ಆದರೆ ಸಂಭ್ರಮಾಚರಣೆ ವೇಳೆ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆಯು ಐಪಿಎಲ್ ಪಾಲಿಗೆ ಕಪ್ಪು ಚುಕ್ಕೆಯಾಗಿ ಪರಿಣಮಿಸಿದ್ದು, ಬಿಸಿಸಿಐ ಇದನ್ನು ಗಂಭೀರವಾಗಿ ಪರಿಗಣಿಸುವ ಸಾಧ್ಯತೆ ಇದೆ.
ಈ ಘಟನೆಯ ಬಗ್ಗೆ ಮಾತನಾಡಿದ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ಆರ್ಸಿಬಿ ವಿಜಯೋತ್ಸವದ ವೇಳೆ ನಡೆದ ಘಟನೆಗೆ ಬಿಸಿಸಿಐ ಏನನ್ನಾದರೂ ಮಾಡಬೇಕಾಗುತ್ತದೆ. ಭಾರತೀಯ ಕ್ರಿಕೆಟ್ ಮಂಡಳಿಯು ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸೂಚನೆ ನೀಡಿದ್ದಾರೆ.
ದೇವಜಿತ್ ಸೈಕಿಯಾ ಅವರ ಈ ಹೇಳಿಕೆ ಬೆನ್ನಲ್ಲೇ ಆರ್ಸಿಬಿ ತಂಡವು ಐಪಿಎಲ್ 2026 ರಿಂದ ಬ್ಯಾನ್ ಆಗುತ್ತಾ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ. ಏಕೆಂದರೆ ಆರ್ಸಿಬಿಯ ವಿಜಯೋತ್ಸವದ ದುರಂತವನ್ನು ಬಿಸಿಸಿಐ ಗಂಭೀರವಾಗಿ ಪರಿಗಣಿಸಿದೆ. ಒಂದು ವೇಳೆ ಈ ಅವಘಡಕ್ಕೆ ಆರ್ಸಿಬಿ ಫ್ರಾಂಚೈಸಿಯೇ ನೇರ ಕಾರಣ ಎಂಬುದು ಕಂಡು ಬಂದರೆ, ಆರ್ಸಿಬಿ ತಂಡಕ್ಕೆ ಒಂದು ವರ್ಷದ ನಿಷೇಧ ಹೇರಬಹುದು ಎನ್ನಲಾಗಿದೆ.