ಕೊಲಂಬೊ, ನ. 29 (DaijiworldNews/AA): ದಿತ್ವಾಹ್ ಚಂಡಮಾರುತದ ಅಬ್ಬರಕ್ಕೆ ಶ್ರೀಲಂಕಾದಲ್ಲಿ 123 ಮಂದಿ ಸಾವನ್ನಪ್ಪಿದ್ದು, ಇನ್ನೂ 120ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಈ ಹಿನ್ನೆಲೆ ಸದ್ಯ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಶ್ರೀಲಂಕಾದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಅಲ್ಲಲ್ಲಿ ಗುಡ್ಡಕುಸಿತ ಸಂಭವಿಸಿದ್ದು, ರಸ್ತೆಗಳು ಜಲಾವೃತಗೊಂಡು ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ದುರಂತದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಈವರೆಗೆ 123 ಜನರು ಮೃತಪಟ್ಟಿದ್ದಾರೆ. 120ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.
ಕಳೆದ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮನೆಗಳಿಗೆ ಹಾನಿಯಾಗಿದ್ದು, ಈವರೆಗೂ 4,36,995 ಜನರನ್ನು ಸ್ಥಳಾಂತರಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವುದನ್ನು ತಪ್ಪಿಸಲು ಸರ್ಕಾರಿ ಕಚೇರಿಗಳು ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಸುಮಾರು 2 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ.