ದುಬೈ, ಜು. 14 (DaijiworldNews/AK):ಹಾರ್ಮುಜ್ ಜಲಸಂಧಿಯಲ್ಲಿ ಯುಎಇ ಟ್ಯಾಂಕರ್ಗಳ ಮೇಲೆ ಇರಾನ್ ನಡೆಸಿದ ಕ್ರೂಸ್ ಕ್ಷಿಪಣಿ ದಾಳಿಯಲ್ಲಿ ಒಬ್ಬ ಭಾರತೀಯ ಸಾವನ್ನಪ್ಪಿದ್ದು, 6 ಮಂದಿಗೆ ಗಾಯಗೊಂಡಿದ್ದಾರೆ.

ಯುಎಇ ರಕ್ಷಣಾ ಸಚಿವಾಲಯವು ನೀಡಿರುವ ಮಾಹಿತಿಯ ಪ್ರಕಾರ, ಒಮಾನ್ ಜಲಪ್ರದೇಶದ ವ್ಯಾಪ್ತಿಯಲ್ಲಿರುವ ಹಾರ್ಮುಜ್ ಜಲಸಂಧಿಯ ದಕ್ಷಿಣದ ಹಡಗು ಮಾರ್ಗದಲ್ಲಿ ಚಲಿಸುತ್ತಿದ್ದ ಯುಎಇ ಧ್ವಜ ಹೊಂದಿದ್ದ ಎರಡು ತೈಲ ಟ್ಯಾಂಕರ್ಗಳ ಮೇಲೆ ಇರಾನ್ ಕ್ರೂಸ್ ಕ್ಷಿಪಣಿ ದಾಳಿ ನಡೆಸಿದೆ.
ದಾಳಿಗೆ ಒಳಗಾದ ಎರಡು ರಾಷ್ಟ್ರೀಯ ಟ್ಯಾಂಕರ್ಗಳನ್ನು ‘ಮೊಂಬಾಸಾ’ ಮತ್ತು ‘ಅಲ್ ಬಹಿಯಾ’ ಎಂದು ಗುರುತಿಸಲಾಗಿದೆ. ಈ ದಾಳಿಯಲ್ಲಿ ಮೊಂಬಾಸಾ ಟ್ಯಾಂಕರ್ನಲ್ಲಿದ್ದ ಒಬ್ಬ ಭಾರತೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ ಒಟ್ಟು 8 ಜನ ಗಾಯಗೊಂಡಿದ್ದು, ಅವರಲ್ಲಿ 6 ಮಂದಿ ಭಾರತೀಯರು ಮತ್ತು ಇಬ್ಬರು ಉಕ್ರೇನ್ ಪ್ರಜೆಗಳಾಗಿದ್ದಾರೆ.
ಗಾಯಗೊಂಡವರ ಪೈಕಿ ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ. ಕ್ಷಿಪಣಿ ದಾಳಿಯಿಂದಾಗಿ ಎರಡೂ ಟ್ಯಾಂಕರ್ಗಳಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಸಾಕಷ್ಟು ವಸ್ತು ಹಾನಿಯಾಗಿದೆ. ಸದ್ಯ ಬೆಂಕಿಯನ್ನು ಹತೋಟಿಗೆ ತರಲಾಗಿದೆ.
ಈ ದಾಳಿಯನ್ನು ಅಂತರರಾಷ್ಟ್ರೀಯ ಕಾನೂನಿನ ಸ್ಪಷ್ಟ ಉಲ್ಲಂಘನೆ ಮತ್ತು ಕಡಲ್ಗಳ್ಳತನ ಎಂದು ಯುಎಇ ತೀವ್ರವಾಗಿ ಖಂಡಿಸಿದೆ. ಜಾಗತಿಕ ಇಂಧನ ಭದ್ರತೆ ಮತ್ತು ಪ್ರಾದೇಶಿಕ ಸ್ಥಿರತೆಗೆ ಧಕ್ಕೆ ತರುವ ಇಂತಹ ಪ್ರಚೋದನಾರಹಿತ ದಾಳಿಗಳನ್ನು ಇರಾನ್ ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದೆ.