ಮಂಗಳೂರು, ಏ.29 (DaijiworldNews/AA): ಮರವೂರು ರೈಲ್ವೇ ಸೇತುವೆ ಪಕ್ಕದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ ಸ್ಥಳಕ್ಕೆ ಗಣಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ 150 ಮೆಟ್ರಿಕ್ ಟನ್ ಮರಳು, ಟಿಪ್ಪರ್ ಸಹಿತ ಸುಮಾರು 5 ಲಕ್ಷ ರೂ. ಮೌಲ್ಯದ ವಿವಿಧ ಯಂತ್ರೋಪಕರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸೋಮವಾರ ಅಪರಾಹ್ನ 3 ಗಂಟೆ ವೇಳೆ ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಮರಳುಗಾರಿಕೆ ನಡೆಸುತ್ತಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ರೈಲ್ವೇ ಟ್ರ್ಯಾಕ್ನ ಕೆಳಭಾಗದಲ್ಲೇ ನಿಯಮ ಮೀರಿ ಅಕ್ರಮ ಮರಳುಗಾರಿಕೆ ನಡೆಸಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿಯಮ ಪ್ರಕಾರ ಸೇತುವೆಯ ಎರಡೂ ಬದಿಗಳಲ್ಲಿ ತಲಾ 100 ಮೀ. ವ್ಯಾಪ್ತಿಯಲ್ಲಿ ಮರಳುಗಾರಿಕೆ ನಿಷೇಧಿಸಲಾಗಿದೆ. ಈ ಆದೇಶದ ಹೊರಯಾಗಿಯೂ ಮರಳುಗಾರಿಕೆ ನಡೆಸಲಾಗುತ್ತಿತ್ತು.
ಈ ಕಾರ್ಯಾಚರಣೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಎಂ.ಸಿ. ಕೃಷ್ಣವೇಣಿ ಮಾರ್ಗದರ್ಶನದಂತೆ ಗಣಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಭಾಗಿಯಾಗಿದ್ದಾರೆ.