ಮಂಗಳೂರು, ಏ.29 (DaijiworldNews/AA): ಕುಡುಪು ಬಳಿ ಏ.27ರಂದು ಸಂಜೆ ಸಂಶಯಾಸ್ಪದ ರೀತಿಯಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿದ್ದು, ಈ ಪ್ರಕರಣ ಸಂಬಂಧ ಪೊಲೀಸರು 15 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.




ಏ. 27 ರಂದು ಸಂಜೆ ಸುಮಾರು 5.30 ಗಂಟೆಗೆ ಮಂಗಳೂರು ನಗರದ ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾನದ ಸಮೀಪದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ಲಭಿಸಿತ್ತು. ಸ್ಥಳೀಯ ಪೊಲೀಸರು ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಳಿಕ ಅಪರಾಧ ಸ್ಥಳ ಪರಿಶೀಲನಾ ತಜ್ಞರು ಹಾಗೂ ಮೊಬೈಲ್ ಪೊರೆನ್ಸಿಕ್ ತಂಡಗಳನ್ನು ಸ್ಥಳಕ್ಕೆ ಕರೆಯಲಾಯಿತು. ಸ್ಥಳ ಪರಿಶೀಲನೆ ವೇಳೆ ಮೃತದೇಹದ ಮೈಮೇಲೆ ಸ್ಪಷ್ಟವಾದ ಹಾಗೂ ಗಂಭೀರ ಗಾಯಗಳು ಕಂಡುಬಾರದ ಕಾರಣ, ಅಪರಾಧ ಸ್ಥಳ ಪರಿಶೀಲನಾ ತಜ್ಞರು ಮತ್ತು ಪೊರೆನ್ಸಿಕ್ ತಂಡಗಳು ಶವ ಪರೀಕ್ಷೆ (ಪೋಸ್ಟ್ ಮಾರ್ಟಂ) ನಡೆಸುವಂತೆ ಶಿಫಾರಸ್ಸು ಮಾಡಿದ್ದಾರೆ.
ಅದರಂತೆ, ಪ್ರಾಥಮಿಕವಾಗಿ, ಅಪರಿಚಿತ ಮೃತದೇಹ ಕಂಡುಬಂದ ಬಗ್ಗೆ ಸ್ವೀಕೃತ ದೂರಿನಂತೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಅಸ್ವಾಭಾವಿಕ ಸಾವು ಪ್ರಕರಣವನ್ನು (ಯುಡಿಆರ್) ದಾಖಲಿಸಲಾಗಿತ್ತು. ಹಾಗೂ ಮೃತದೇಹವನ್ನು ಮರಣೋತ್ತರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಸಲುವಾಗಿ ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಯಿತು.
ಬಳಿಕ ಮೃತನ ಗುರುತು ಪತ್ತೆ ಹಚ್ಚುವ ಸಲುವಾಗಿ, ಮೃತನ ಫೋಟೋಗಳನ್ನು ವ್ಯಾಪಕವಾಗಿ ಹಂಚಲಾಗಿತ್ತು. ಘಟನೆಯ ಸಮಯದಲ್ಲಿ ಸ್ಥಳದಲ್ಲಿದ್ದ ಸಾಕ್ಷಿದಾರರು ಮತ್ತು ಅನುಮಾನಿತ ವ್ಯಕ್ತಿಗಳನ್ನು ವಿಚಾರಣೆ ಮಾಡುವ ಮತ್ತು ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳು ಹಾಗೂ ಮೊಬೈಲ್/ಟವರ್ ಡಂಪ್ ಡೇಟಾ ಸಂಗ್ರಹಿಸಿ ವಿಶ್ಲೇಷಿಸಲು ಹಲವು ತಂಡಗಳನ್ನು ರಚಿಸಲಾಯಿತು.
ತನಿಖೆಯಲ್ಲಿ ಲಭ್ಯವಾದ ಮಾಹಿತಿ ಹಾಗೂ ಸ್ಥಳೀಯ ವ್ಯಕ್ತಿಗಳ ಭಾಗವಹಿಸುವಿಕೆಯ ಬಗ್ಗೆ ಹೆಚ್ಚುತ್ತಿರುವ ಅನುಮಾನಗಳ ಆಧಾರದಲ್ಲಿ, ದಿನಾಂಕ ಏ. 28ರಂದು ಅಪರಿಚಿತ ಮೃತದೇಹದ ಶವ ಪರೀಕ್ಷೆ ನಡೆಸಲಾಯಿತು. ಮರಣೋತ್ತರ ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು ನೀಡಿದ ಪ್ರಾಥಮಿಕ ವರದಿ ಪ್ರಕಾರ, ಮೃತನ ಬೆನ್ನು ಭಾಗದಲ್ಲಿ ಬಹಳಷ್ಟು ಬಲವಾದ ಹೊಡೆತದ ಗಾಯಗಳ ಕಾರಣದಿಂದ ಉಂಟಾದ ರಕ್ತಸ್ರಾವ, ಶಾಕ್ ಮತ್ತು ಸೂಕ್ತ ಸಮಯದಲ್ಲಿ ಸರಿಯಾದ ಚಿಕಿತ್ಸೆ ಸಿಗದಿರುವುದರಿಂದ ಆತ ಸಾವನ್ನಪ್ಪಿರುವುದು ಕಂಡುಬಂದಿರುತ್ತದೆ.
ತನಿಖೆಯಲ್ಲಿ ತಿಳಿದುಬಂದಂತೆ, ದಿನಾಂಕ ಏ.27 ರಂದು ಮಧ್ಯಾಹ್ನ ಸುಮಾರು 3.00 ಗಂಟೆಗೆ ಭಟ್ರ ಕಲ್ಲುರ್ಟಿ ದೈವಸ್ಥಾನದ ಬಳಿ ಮೈದಾನದಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಾವಳಿಯ ಸಮಯದಲ್ಲಿ, ಸದ್ರಿ ಅಪರಿಚಿತ ವ್ಯಕ್ತಿಗೆ ಕೆಲವರು ಗುಂಪು ಸೇರಿ ಕೈಯಿಂದ ಮತ್ತು ಕಟ್ಟಿಗೆಯಿಂದ ಹೊಡೆದು, ಕಾಲಿನಿಂದ ಯದ್ವಾತದ್ವ ತುಳಿದು ಹಲ್ಲೆ ನಡೆಸಿದ್ದು, ಈ ಸಮಯ ಕೆಲವರು ತಡೆಯಲು ಯತ್ನಿಸಿದರೂ, ಆತನ ಮೇಲೆ ನಿರಂತರ ಹಲ್ಲೆ ನಡೆಸಿದ ಕಾರಣ ಅಪರಿಚಿತ ವ್ಯಕ್ತಿಯು ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಪ್ರಕರಣ ಸಂಬಂಧ ಮಂಗಳೂರು, ಕುಲಶೇಖರ ನಿವಾಸಿ ದೀಪಕ್ ಕುಮಾರ್ (33) ಎಂಬವರು 19 ಜನರು ಮತ್ತು ಇತರರ ವಿರುದ್ಧ ದೂರು ನೀಡಿದ್ದಾರೆ. ದೂರಿನ ಆಧಾರದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸರು ಕುಡುಪು ನಿವಾಸಿಗಳಾದ ಸಚಿನ್ ಟಿ (26), ದೇವದಾಸ್ (50), ಮಂಜುನಾಥ್ (32), ಸಾಯಿದೀಪ್ (29), ನಿತೇಶ್ ಕುಮಾರ್ @ ಸಂತೋಷ್ (33), ದೀಕ್ಷಿತ್ ಕುಮಾರ್ (32), ಸಂದೀಪ್ (23), ವಿವಿಯನ್ ಆಳ್ವಾರೀಸ್ (41), ಶ್ರೀದತ್ತ (32), ರಾಹುಲ್ (23), ಪ್ರದೀಪ್ ಕುಮಾರ್ (35), ಮನೀಷ್ ಶೆಟ್ಟಿ (21), ಧನುಷ್ (31), ದೀಕ್ಷಿತ್ (27), ಕಿಶೋರ್ ಕುಮಾರ್ (37) ಅವರನ್ನು ವಶಕ್ಕೆ ಪಡೆದಿಯಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಪ್ರಸ್ತುತ, ಲಭ್ಯ ಮಾಹಿತಿಗಳ ಆಧಾರದಲ್ಲಿ ಸದ್ರಿ ಕೃತ್ಯದಲ್ಲಿ ಸುಮಾರು 25 ಕ್ಕೂ ಹೆಚ್ಚು ವ್ಯಕ್ತಿಗಳು ಭಾಗವಹಿಸಿರುವ ಸಂಶಯವಿದ್ದು, ಈಗಾಗಲೇ 15 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತು ಪ್ರಾಥಮಿಕ ವರದಿಯಲ್ಲಿ ಉಲ್ಲೇಖಿಸಲಾದ ಮತ್ತು ಕೃತ್ಯದಲ್ಲಿ ಬಾಗಿಯಾದ ಉಳಿದ ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆಮಾಡಿ ಬಂಧಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.