ಕಾಸರಗೋಡು, ಜೂ. 13 (DaijiworldNews/TA): ಜಿಲ್ಲಾ ನಿವೃತ್ತ ಶಿಕ್ಷಣಾಧಿಕಾರಿ ದಿನೇಶ್ ವಿ. (56) ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಆಗಿ ಶುಕ್ರವಾರ ಸಂಜೆ ನಿಧನರಾದರು. ಡೆಂಗ್ಯೂ ಜ್ವರದಿಂದ ಕುಂಬಳೆ ಆಸ್ಪತ್ರೆಗೆ ದಾಖಲಾಗಿದ್ದ ಇವರನ್ನು ಜ್ವರ ಉಲ್ಬಣ ಗೊಂಡ ಹಿನ್ನಲೆಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ.

13 ದಿನಗಳ ಹಿಂದೆಯಷ್ಟೇ ಸೇವೆಯಿಂದ ನಿವೃತ್ತರಾಗಿದ್ದರು. ಮಂಜೇಶ್ವರ ಕುಂಜತ್ತೂರು ಸರಕಾರಿ ಶಾಲೆಯಲ್ಲಿ ಅಧ್ಯಾಪಕ ವೃತ್ತಿ ಆರಂಭಿಸಿದ ದಿನೇಶ್ರವರು ಬಂಗ್ರ ಮಂಜೇಶ್ವರ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಭಡ್ತಿ ಹೊಂದಿ ಸೇವೆ ಸಲ್ಲಿಸಿದ್ದರು. ಶಿಕ್ಷಣ ಇಲಾಖೆಯ ಬಿಪಿಸಿ ಆಗಿಯೂ ಭೌತಿಕ ವಿಜ್ಞಾನ ತರಬೇತಿ ಕೇಂದ್ರದ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸಿದ್ದರು.
ಮಂಜೇಶ್ವರ ಉಪಜಿಲ್ಲಾ ಶಿಕ್ಷಣಾಧಿಕಾರಿಯಾಗಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿದ ಇವರು ಸಾರ್ವಜನಿಕ ಶಿಕ್ಷಣ ಇಲಾಖಾ ನಿರ್ದೇಶನಾಲಯದಲ್ಲೂ ಕಾರ್ಯನಿರ್ವಹಿಸಿದ್ದರು. ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿಯಾಗಿ ಜನಾನುರಾಗಿಯಾಗಿದ್ದ ದಿನೇಶ್ ಇದೇ ಮೇ 31 ರಂದು ಸೇವೆಯಿಂದ ನಿವೃತ್ತರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.