ಬಂಟ್ವಾಳ, ಜೂ. 25 (DaijiworldNews/TA): ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ಅವರನ್ನು ಅಮಾನತು ಮಾಡಿ ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆದೇಶ ಹೊರಡಿಸಿದ್ದಾರೆ.

ಜೂ.23ರಂದು ಇಡ್ಕಿದು ಗ್ರಾ.ಪಂ. ಸಭಾಭವನದಲ್ಲಿ ರಾಜಕೀಯ ಪಕ್ಷವೊಂದರ ಸಭೆ ನಡೆಸಲು ಅವಕಾಶ ಕಲ್ಪಿಸಿದ್ದಾರೆ ಎಂದು ಆರೋಪಿಸಲಾಗಿದೆ. ಕರ್ನಾಟಕ ನಾಗರೀಕ ಸೇವಾ ನಡತೆ ನಿಯಮವನ್ನು ಉಲ್ಲಂಘಿಸಿ ಕರ್ತವ್ಯದಲ್ಲಿ ನಿರ್ಲಕ್ಷ್ಯತೆಯನ್ನು ತೋರಿರುವ ಹಿನ್ನೆಲೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿರವರು ಅಭಿವೃದ್ಧಿ ಅಧಿಕಾರಿ ಬಳಿ ಕಾರಣ ಕೇಳಿ ನೋಟಿಸು ನೀಡಿದ್ದರು.
ಇನ್ನು ನೋಟಿಸಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗ್ರಾಮ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಿರುವುದು ತನ್ನ ಗಮನಕ್ಕೆ ಬಂದಿಲ್ಲ ಎಂಬುದಾಗಿ ಸಮಜಾಯಿಷಿ ನೀಡಿದ್ದರು. ಇನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೀಡಿರುವ ಸಮಜಾಯಿಷಿಕೆ ಒಪ್ಪತಕ್ಕದ್ದಲ್ಲ. ಸರ್ಕಾರಿ ಕಛೇರಿಯಲ್ಲಿ ಯಾವುದೇ ರಾಜಕೀಯ ಪಕ್ಷಗಳ ಸಭೆ ಸಮಾರಂಭಗಳಿಗೆ ಅವಕಾಶ ನೀಡುವುದು ಸಮಂಜಸವಲ್ಲ. ಇದಕ್ಕೆ ಅವಕಾಶ ನೀಡಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಉಲ್ಲೇಖದಂತೆ ಕಾರ್ಯನಿರ್ವಾಹಕ ಅಧಿಕಾರಿ ವರದಿ ಸಲ್ಲಿಸಿದ್ದರು. ಸದ್ಯ ಪಿಡಿಒ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.