ಮಂಗಳೂರು, ಸೆ. 06 (DaijiworldNews/AK): ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಹೇಳಿದ್ದ ದೂರುದಾರ ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನನ ಎಸ್ಐಟಿ ಕಸ್ಟಡಿ ಅಂತ್ಯವಾಗಿದ್ದು, 14 ದಿನ ನ್ಯಾಯಾಂಗ ಬಂಧನ ವಿಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.

ಭದ್ರತೆ ದೃಷ್ಟಿಯಿಂದ ಶಿವಮೊಗ್ಗ ಸೆಂಟ್ರಲ್ ಜೈಲಿಗೆ ಚಿನ್ನಯ್ಯನನ್ನು ಎಸ್ಐಟಿ ಪೊಲೀಸರು ಸ್ಥಳಾಂತರಿಸಿದ್ದಾರೆ. ನ್ಯಾಯಾಂಗ ಬಂಧನಕ್ಕೊಳಗಾಗುತ್ತಿದ್ದಂತೆ ಇತ್ತ ಉಚಿತ ಕಾನೂನು ಸೇವೆಗಳ ಪ್ರಾಧಿಕಾರ ನೇಮಿಸಿದ್ದ ಚಿನ್ನಯ್ಯ ಪರ ವಕೀಲರಿಂದ ಜಾಮೀನು ಕೋರಿ ಬೆಳ್ತಂಗಡಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಸೆಪ್ಟೆಂಬರ್ 9ಕ್ಕೆ ಮುಂದೂಡಿದೆ.
ಚಿನ್ನಯ್ಯ, ಧರ್ಮಸ್ಥಳ ಸುತ್ತ ಮುತ್ತ 17 ಗುಂಡಿ ಅಗೆಸಿದ್ದ. ಕೊನೆಗೆ ನಾನು ಹೇಳಿದ್ದೆಲ್ಲ ಸುಳ್ಳು ಅಂತಾ ತಪ್ಪೊಪ್ಪಿಕೊಂಡಿದ್ದ. ಕಳೆದ 15 ದಿನದಿಂದ ತೀವ್ರ ವಿಚಾರಣೆ ನಡೆಸಿ ಮಹತ್ವದ ದಾಖಲೆಗಳನ್ನ ಸಂಗ್ರಹಿಸಿರುವ ಎಸ್ಐಟಿ ಅಧಿಕಾರಿಗಳು, ಜೈಲಿಗಟ್ಟಿದ್ದಾರೆ.
ಇಂದು ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಿ, ಬೆಳ್ತಂಗಡಿ ಕೋರ್ಟ್ಗೆ ಚಿನ್ನಯ್ಯನನ್ನ ಹಾಜರುಪಡಿಸಲಾಗಿತ್ತು. ಕೋರ್ಟ್ಗೆ ಬರುವಾಗಲೇ ಚಿನ್ನಯ್ಯನನ್ನ ಲಗೇಜ್ ಸಮೇತ ಕರೆದುಕೊಂಡು ಬರಲಾಗಿತ್ತು. ಚಿನ್ನಯ್ಯನನ್ನ SITಕಸ್ಟಡಿಗೆ ಕೇಳದ ಕಾರಣ, 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಶಿವಮೊಗ್ಗ ಜೈಲಿಗೆ ಶಿಫ್ಟ್ ಮಾಡಲಾಗಿದೆ.