ಕಾಪು,ಸೆ. 11 (DaijiworldNews/AK): ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ಲಾರಿಯನ್ನು ಶಿರ್ವ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಕಾಪು ತಾಲೂಕಿನ ಶಿರ್ವ ಗ್ರಾಮದ ಗರಡಿ ಮನೆಯಲ್ಲಿರುವ ಪಾಪನಾಶಿನಿ ಹೊಳೆ ಬಳಿಯ ಸರ್ಕಾರಿ ಜಮೀನಿನ ಬಳಿ ಅಕ್ರಮ ಮರಳು ಸಾಗಾಟ ಮಾಡುವ ಕುರಿತು ಮಾಹಿತಿ ಪಡೆದ ಶಿರ್ವ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಹಿಟಾಚಿ ಅಗೆಯುವ ಯಂತ್ರದ ಸಹಾಯದಿಂದ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿತ್ತು ಎನ್ನಲಾಗಿದೆ.

ಕಾರ್ಯಾಚರಣೆಯ ಸಮಯದಲ್ಲಿ, ಪೊಲೀಸರು ಮರಳು ತುಂಬಿದ್ದ ಎರಡು ಟಿಪ್ಪರ್ ಲಾರಿಗಳು ಮತ್ತು ಒಂದು ಅಗೆಯುವ ಯಂತ್ರವನ್ನು ಸ್ಥಳದಿಂದ ವಶಪಡಿಸಿಕೊಂಡಿದ್ದಾರೆ. ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಐಪಿಎಸ್ ಅವರ ನಿರ್ದೇಶನದಲ್ಲಿ, ಹೆಚ್ಚುವರಿ ಎಸ್ಪಿ ಸುಧಾಕರ್ ಎಸ್ ನಾಯಕ್, ಕಾರ್ಕಳ ಎಎಸ್ಪಿ ಡಾ. ಹರ್ಷ ಪ್ರಿಯಂವದ, ಐಪಿಎಸ್ ಮತ್ತು ಕಾಪು ವೃತ್ತ ನಿರೀಕ್ಷಕ ಜಯಶ್ರೀ ಮಾನೆ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಯಿತು.