ಬೆಳ್ತಂಗಡಿ, ನ. 10 (DaijiworldNews/AA): ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿಯನ್ನು ಬಂಧಿಸಲಾಗಿದೆ.

ಮಾಲಾಡಿ ಗ್ರಾಮದ ನಿವಾಸಿ ಪ್ರಕಾಶ್ ಶೆಟ್ಟಿ (53) ದೂರುದಾರರು.
ದೂರುದಾರರ ಮನೆಯ ಸಮೀಪ ಪ್ರೇಮಾ ಶೆಟ್ಟಿ ಎಂಬವರ ಮನೆಯಿದ್ದು, ಪ್ರೇಮಾ ಅವರು ಕೆಲ ಸಮಯದಿಂದ ವಿದೇಶದಲ್ಲಿದ್ದು, ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಗೆ ಸಿ.ಸಿ ಟಿ.ವಿ ಅಳವಡಿಸಿರುತ್ತಾರೆ. ನ.9ರಂದು ಬೆಳಿಗ್ಗೆ, ಸದ್ರಿ ಪ್ರೇಮಾರವರ ಮಗಳು ದೂರುದಾರರಿಗೆ ಕರೆ ಮಾಡಿ ಅವರ ತಾಯಿಯ ಮನೆಯಲ್ಲಿ ಯಾರೋ ವ್ಯಕ್ತಿ ಕಳ್ಳತನಕ್ಕೆ ಬಂದಿರುವಂತೆ ಸಿ.ಸಿ ಟಿ.ವಿಯಲ್ಲಿ ಕಾಣುತ್ತಿರುವುದಾಗಿ ತಿಳಿಸಿರುತ್ತಾರೆ.
ತಕ್ಷಣ ದೂರುದಾರರು ಪ್ರೇಮರವರ ಮನೆಯ ಬಳಿ ತೆರಳಿ ನೋಡಿದಾಗ, ಪ್ರೇಮಾರವರ ಮನೆಯ ಮೇಲ್ಚಾವಣಿಯಲ್ಲಿ ಒಬ್ಬ ಅಪರಿಚಿತ ವ್ಯಕ್ತಿಯು ಕೈಯಲ್ಲಿ ಕಬ್ಬಿಣದ ರಾಡ್ ಹಿಡಿದು ನಿಂತುಕೊಂಡಿದ್ದ. ಈ ವೇಳೆ ಆತ ದೂರುದಾರರನ್ನು ನೋಡಿ ಕೆಳಗೆ ಹಾರಿ ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ.
ಈ ವೇಳೆ ದೂರುದಾರರು ಆತನನ್ನು ಹಿಡಿಯಲು ಪ್ರಯತ್ನಿಸಿದಾಗ, ಆರೋಪಿಯು ಆತನ ಕೈಯಲ್ಲಿದ್ದ ರಾಡಿನಿಂದ ಹಲ್ಲೆ ನಡೆಸಿರುತ್ತಾನೆ. ಬಳಿಕ ಸ್ಥಳೀಯ ನಿವಾಸಿಗಳ ಸಹಾಯದಿಂದ ಆತನನ್ನು ಹಿಡಿಯಲಾಗಿರುತ್ತದೆ. ಆತನನ್ನು ವಿಚಾರಿಸಾತ ಆತನು ಕೇರಳ ಮೂಲದ, ತಲಪಾಡಿ ನಿವಾಸಿ ಕಿರಣ್ ಎಂಬುದಾಗಿ ತಿಳಿಸಿದ್ದು, ನಂತರ ಆತನನ್ನು ಪೂಂಜಾಲಕಟ್ಟೆ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಲಾಗಿರುತ್ತದೆ.
ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ: 73/2025, ಕಲಂ: 331(1) 62 118(1) 307 BNS ACT ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಆರೋಪಿತನ ಪ್ರಾಥಮಿಕ ವಿಚಾರಣೆಯ ವೇಳೆ ಆರೋಪಿತನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ, ಮಂಗಳೂರು ನಗರ ವ್ಯಾಪ್ತಿಯಲ್ಲಿ ಹಾಗೂ ಕೇರಳ ರಾಜ್ಯದಲ್ಲಿ ಸೇರಿದಂತೆ, ಒಟ್ಟು 13 ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದ್ದು, ತನಿಖೆ ಮುಂದುವರಿದಿರುತ್ತದೆ.