ಉಡುಪಿ, ಫೆ. 09 (DaijiworldNews/AA): ಕುಳಿತಿದ್ದ ಸ್ಥಿತಿಯಲ್ಲೇ ಪ್ರವಾಸಿಗರೊಬ್ಬರು ಮೃತಪಟ್ಟ ಘಟನೆ ಉಡುಪಿಯ ಹಳೇ ಸರ್ಕಾರಿ ಬಸ್ ನಿಲ್ದಾಣದ ಸಮೀಪವಿರುವ ಲಾಡ್ಜ್ವೊಂದರಲ್ಲಿ ಸೋಮವಾರ ನಡೆದಿದೆ.

ದಾವಣಗೆರೆ ಮೂಲದ ಮಹಾಂತೇಶ್ ಎಂ.ಜಿ. ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮಹಾಂತೇಶ್ ಅವರು ಬಹಳ ಹೊತ್ತಾದರೂ ಕೊಠಡಿಯಿಂದ ಹೊರಬಾರದಿದ್ದಾಗ ಲಾಡ್ಜ್ ಸಿಬ್ಬಂದಿಗೆ ಅನುಮಾನ ಬಂದಿದೆ. ತಕ್ಷಣವೇ ಬಾಗಿಲು ತೆರೆದು ನೋಡಿದಾಗ ಅವರು ಕುರ್ಚಿಯಲ್ಲೇ ಕುಳಿತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮನೆಯಿಂದ ಹೊರಡುವಾಗ ಮಂಗಳೂರಿನ ಆಸ್ಪತ್ರೆಗೆ ಹೋಗುತ್ತಿರುವುದಾಗಿ ಕುಟುಂಬದವರಿಗೆ ತಿಳಿಸಿದ್ದರು ಎಂದು ತಿಳಿದುಬಂದಿದೆ. ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ಅನಾರೋಗ್ಯದ ಕಾರಣದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ನಾರಾಯಣ್, ಸಹಾಯಕ ಸಬ್ ಇನ್ಸ್ಪೆಕ್ಟರ್ ಹರೀಶ್ ಮತ್ತು ಹೆಡ್ ಕಾನ್ಸ್ಟೆಬಲ್ ಆಶಾಲತಾ ಅವರು ಮೃತರ ಪತ್ನಿ ಮತ್ತು ಸಹೋದರನ ಸಮ್ಮುಖದಲ್ಲಿ ಕಾನೂನು ಪ್ರಕ್ರಿಯೆಗಳನ್ನು ನಡೆಸಿದರು.
ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ನೆರವಿನೊಂದಿಗೆ ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.