ಬಂಟ್ವಾಳ, ಜೂ. 29 (DaijiworldNews/AK): ಸೋಮವಾರ ಬೆಳಗ್ಗೆ ಚಲಿಸುತ್ತಿದ್ದ ಕಾರೊಂದರ ಮೇಲೆ ಬೃಹತ್ ಮರ ಹಾಗೂ ವಿದ್ಯುತ್ ಕಂಬವೊಂದು ಏಕಾಏಕಿ ಉರುಳಿಬಿದ್ದ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದರೂ, ಒಳಗಿದ್ದ ದಂಪತಿ ಯಾವುದೇ ಅಪಾಯವಿಲ್ಲದೆ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ವಿಫ್ಟ್ ಕಾರಿನಲ್ಲಿ ಕುದ್ದುಪದವು ನಿಂದ ವಿಟ್ಲ ಕಡೆಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್, ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪತಿ ಮತ್ತು ಪತ್ನಿಗೆ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ, ಆದರೆ ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಈ ಘಟನೆಯಿಂದಾಗಿ ಹೆದ್ದಾರಿಯಲ್ಲಿ ತಾತ್ಕಾಲಿಕವಾಗಿ ಸಂಚಾರ ಅಸ್ತವ್ಯಸ್ತಗೊಂಡು, ವಾಹನ ಸಂಚಾರ ಸ್ವಲ್ಪ ಹೊತ್ತು ಸ್ಥಗಿತಗೊಂಡಿತು. ನಂತರ, ಪೊಲೀಸ್ ಸಿಬ್ಬಂದಿ, ಮೆಸ್ಕಾಂ ಸಿಬ್ಬಂದಿ ಮತ್ತು ಸ್ಥಳೀಯ ನಿವಾಸಿಗಳು ಒಟ್ಟಾಗಿ ರಸ್ತೆಗೆ ಬಿದ್ದ ಮರ ಮತ್ತು ವಿದ್ಯುತ್ ಕಂಬವನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದರು, ನಂತರ ಸಂಚಾರ ಯಥಾ ಸ್ಥಿತಿಗೆ ಮರಳಿ ವಾಹನಗಳ ಸುಗಮ ಸಂಚಾರಕ್ಕೆ ಮತ್ತೆ ಅನುವು ಮಾಡಿಕೊಡಲಾಯಿತು.