ಮಂಗಳೂರು, ಜು. 15 (DaijiworldNews/AK): ಎಸ್ಐಆರ್ ಬಗ್ಗೆ ಯಾವುದೇ ರೀತಿಯ ಭಯ, ಅಂಜಿಕೆ ಬೇಡ. ಇದು ಮತದಾರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಲು ಮಾಡುವಂಥದ್ದಲ್ಲ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸ್ಪಷ್ಟಪಡಿಸಿದ್ದಾರೆ.




ದ.ಕ. ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಬುಧವಾರ ಸ್ವೀಪ್ ಸಮಿತಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಳ್ಳಲಾದ ವಿಶೇಷ ಜಾಗೃತಿ ಅಭಿಯಾನ ಉದ್ಘಾಟಿಸಿ ಅವರು ಕಾಲೇಜು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
2002ರ ಬಳಿಕ ಸುಮಾರು 24 ವರ್ಷಗಳ ಬಳಿಕ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿದೆ. 18 ವರ್ಷ ತುಂಬಿದ ಎಲ್ಲ ನಾಗರಿಕರಿಗೂ ಮತದಾನದ ಸಂವಿಧಾನಿಕ ಹಕ್ಕನ್ನು ನೀಡಬೇಕಾಗಿದೆ. ಹಾಗಾಗಿ ಎಸ್ಐಆರ್ ಮೂಲಕ ಅರ್ಹ ಮತದಾರರನ್ನು ಕಂಡುಹಿಡಿದು ಅವರನ್ನು ಉಳಿಸುವ ಪ್ರಕ್ರಿಯೆ ನಡೆಯುತ್ತದೆ ಎಂದವರು ಹೇಳಿದರು.
ಮತದಾರರಾದ ಮೇಲೆ ಚಾಚೂ ತಪ್ಪದೆ ಮತದಾನ ಮಾಡಬೇಕು. ಮತದಾನ ಮಾಡದೆ ಪ್ರಶ್ನಿಸುವ ಅಧಿಕಾರವೂ ಇರುವುದಿಲ್ಲ. ಹಾಗಾಗಿ ಮತದಾನದಲ್ಲಿ ಭಾಗವಹಿಸಬೇಕೆಂದರೆ ಪಟ್ಟಿಯಲ್ಲಿ ಹೆಸರು ಇರಬೇಕು. ಕೆಲವೊಮ್ಮೆ ಒಂದು ಮತದಿಂದವೂ ಅಭ್ಯರ್ಥಿಯ ಭವಿಷ್ಯ ನಿರ್ಧಾರವಾಗುತ್ತದೆ. ಅದರಿಂದ ನಿಮ್ಮ ಭವಿಷ್ಯ ನಿರ್ಧಾರವಾಗುತ್ತದೆ ಎಂದು ಅವರು ಯುವ ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿನಾಯಕ್ ಕರ್ಬಾರಿ, ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒಗಳು) ಈಗಾಗಲೇ ಎಸ್ಐಆರ್ ಪ್ರಕ್ರಿಯೆಯ ಭಾಗವಾಗಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಿದ್ದಾರೆ ಎಂದು ಹೇಳಿದರು.
ಈ ಪ್ರಕ್ರಿಯೆಯನ್ನು ಸರಳ ಎಂದು ವಿವರಿಸಿದ ಅವರು, ಸಾರ್ವಜನಿಕರು ಫಾರ್ಮ್ಗಳನ್ನು ಭರ್ತಿ ಮಾಡಿ ಆದಷ್ಟು ಬೇಗ ಆಯಾ ಬಿಎಲ್ಒಗಳಿಗೆ ಸಲ್ಲಿಸುವಂತೆ ಮನವಿ ಮಾಡಿದರು. ತರಬೇತಿ ಪಡೆದ ಸಂಪನ್ಮೂಲ ವ್ಯಕ್ತಿಗಳು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ, ಅವರು ತಮ್ಮ ಕುಟುಂಬದ ಎಲ್ಲಾ ಸದಸ್ಯರು ಫಾರ್ಮ್ಗಳನ್ನು ಭರ್ತಿ ಮಾಡುವುದನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಅವರ ನೆರೆಹೊರೆಯವರೂ ಸಹ ಅದೇ ರೀತಿ ಮಾಡಲು ಪ್ರೋತ್ಸಾಹಿಸಬೇಕು ಎಂದು ಅವರು ಹೇಳಿದರು.
ಮೊಬೈಲ್ ಅಪ್ಲಿಕೇಶನ್ ಮೂಲಕ ನಿಖರವಾದ ಮಾಹಿತಿಯನ್ನು ಅಪ್ಲೋಡ್ ಮಾಡಲು ಬಿಎಲ್ಒಗಳು ಕೇವಲ ಎರಡರಿಂದ ಐದು ನಿಮಿಷಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಕರ್ಬಾರಿ ಹೇಳಿದರು. ಆದರೆ ಮಾಹಿತಿಯು ಅಪೂರ್ಣವಾಗಿದ್ದರೆ ಅಥವಾ ತಪ್ಪಾಗಿದ್ದರೆ, ಇತರ ಮೂಲಗಳಿಂದ ವಿವರಗಳನ್ನು ಪರಿಶೀಲಿಸಲು ಮತ್ತು ಅವುಗಳನ್ನು ಅಪ್ಲೋಡ್ ಮಾಡಲು 30 ನಿಮಿಷದಿಂದ ಒಂದು ಗಂಟೆಯವರೆಗೆ ತೆಗೆದುಕೊಳ್ಳಬಹುದು. ಅಪ್ಲೋಡ್ ಮಾಡಿದ ಮಾಹಿತಿಯನ್ನು ಅಂತಿಮಗೊಳಿಸುವ ಮೊದಲು ಬಿಎಲ್ಒ ಮೇಲ್ವಿಚಾರಕರು ಸಹ ಪರಿಶೀಲಿಸುತ್ತಾರೆ ಎಂದರು.
ಆದ್ದರಿಂದ ಸುಗಮ ಮತ್ತು ಸಕಾಲಿಕ ಪ್ರಕ್ರಿಯೆಗೆ ಅನುಕೂಲವಾಗುವಂತೆ ಭರ್ತಿ ಮಾಡಿದ ನಮೂನೆಗಳನ್ನು ವಿಳಂಬವಿಲ್ಲದೆ ಸಲ್ಲಿಸುವಂತೆ ಅವರು ಸಾರ್ವಜನಿಕರನ್ನು ಕೋರಿದರು.
ವಿದೇಶದಲ್ಲಿ ವಾಸಿಸುವ ಮತದಾರರು ಸಹ ಆನ್ಲೈನ್ನಲ್ಲಿ SIR ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು ಎಂದು ಅವರು ಮಾಹಿತಿ ನೀಡಿದರು. ಇಲ್ಲಿಯವರೆಗೆ, ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 1,700 ಮತದಾರರು ಆನ್ಲೈನ್ ಮೋಡ್ ಮೂಲಕ ತಮ್ಮ ವಿವರಗಳನ್ನು ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಅರ್ಚಿತ್ ಡೋಂಗ್ರೆ ಉಪಸ್ಥಿತರಿದ್ದರು. ಜಿಲ್ಲಾ ಯೋಜನಾ ಸಮನ್ವಯ ಅಧಿಕಾರಿ ಡಾ. ಸುಮಂಗಲಾ ಎಸ್ ನಾಯಕ್ ಸ್ವಾಗತಿಸಿದರು, ಗಾಯತ್ರಿ ಕಾರ್ಯಕ್ರಮ ನಿರೂಪಿಸಿದರು.