ಬಂಟ್ವಾಳ, ಜು. 30 (DaijiworldNews/TA): ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ ಬಳಕೆಯ ಹಲವು ವಸ್ತುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.



ಕೊಳಕೆ ನಿವಾಸಿ ಚಂದ್ರಹಾಸ ಅವರ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಏಕಾಏಕಿ ವಿದ್ಯುತ್ ಸಂಪರ್ಕದಲ್ಲಿ ಉಂಟಾದ ತಾಂತ್ರಿಕ ದೋಷದಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ ಎಂದು ತಿಳಿದುಬಂದಿದೆ. ಇದರ ಪರಿಣಾಮವಾಗಿ ಮನೆಯೊಳಗೆ ಹೊಗೆ ಆವರಿಸಿ, ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಮನೆಯೊಳಗಿನ ಪೀಠೋಪಕರಣಗಳು ಹಾಗೂ ದಿನನಿತ್ಯ ಬಳಕೆಯ ವಸ್ತುಗಳಿಗೆ ವ್ಯಾಪಿಸಿದೆ. ಘಟನೆಯಲ್ಲಿ ಹಾಸಿಗೆ, ಅಲಮಾರಿಯಲ್ಲಿದ್ದ ವಸ್ತುಗಳು, ಬಟ್ಟೆಗಳು, ಗೃಹೋಪಯೋಗಿ ಸಾಮಗ್ರಿಗಳು ಸೇರಿದಂತೆ ಹಲವು ವಸ್ತುಗಳು ಹಾನಿಗೊಳಗಾಗಿದ್ದು, ಕುಟುಂಬಕ್ಕೆ ಹೆಚ್ಚಿನ ಪ್ರಮಾಣದ ಆರ್ಥಿಕ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.
ಅದೃಷ್ಟವಶಾತ್ ಘಟನೆಯ ವೇಳೆ ಮನೆಯಲ್ಲಿದ್ದವರು ಸುರಕ್ಷಿತವಾಗಿ ಹೊರಬಂದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳೀಯರು ತಕ್ಷಣವೇ ಬೆಂಕಿಯನ್ನು ನಿಯಂತ್ರಿಸಲು ಮುಂದಾಗಿದ್ದು, ಹೆಚ್ಚಿನ ಅನಾಹುತ ಸಂಭವಿಸುವುದನ್ನು ತಪ್ಪಿಸಿದ್ದಾರೆ. ಮಾಹಿತಿ ತಿಳಿದು ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.