ಕಡಬ, ಆ. 19 (DaijiworldNews/AA): ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರವನ್ನು ಪರಿಶೀಲಿಸಲಾಯಿತು. ಇದೇ ವೇಳೆ ವಿವಿಧ ಮೂಲಸೌಕರ್ಯ ಕಾಮಗಾರಿಗಳು ಹಾಗೂ ಪ್ರಯಾಣಿಕರ ಸೌಲಭ್ಯಗಳ ಪ್ರಗತಿಯನ್ನು ಅಧಿಕಾರಿಗಳು ಪರಿಶೀಲಿಸಿದರು.

ಪಶ್ಚಿಮ ಘಟ್ಟಗಳ ಮೂಲಕ ಹಾದುಹೋಗುವ ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗವು ಇಳಿಜಾರು, ಸುರಂಗಗಳು, ಸೇತುವೆಗಳು ಹಾಗೂ ತಿರುವುಗಳನ್ನು ಒಳಗೊಂಡಿರುವ ತಾಂತ್ರಿಕವಾಗಿ ಸವಾಲಿನ ಮಾರ್ಗವಾಗಿದೆ. ಪರಿಶೀಲನೆ ವೇಳೆ ದಕ್ಷಿಣ ಪಶ್ಚಿಮ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಪಿ. ಅನಂತ್ ಅವರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಸಂಬಂಧಿಸಿದ ಕಾರ್ಯಾಚರಣೆ ಹಾಗೂ ಸುರಕ್ಷತಾ ಅಂಶಗಳನ್ನು ಪರಿಶೀಲಿಸಿದರು. ಈ ಮಾರ್ಗದಲ್ಲಿನ ರೈಲ್ವೇ ಮೂಲಸೌಕರ್ಯದ ಸಿದ್ಧತೆಯನ್ನೂ ಅವರು ಅವಲೋಕಿಸಿದರು.
ಜೊತೆಗೆ, ಅಮೃತ್ ಭಾರತ್ ಸ್ಟೇಷನ್ ಯೋಜನೆ ಅಡಿಯಲ್ಲಿ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನೂ ಅವರು ಪರಿಶೀಲಿಸಿದರು. ನಿಲ್ದಾಣಗಳ ಪುನರಾಭಿವೃದ್ಧಿ, ಪ್ರಯಾಣಿಕರು ಹಾಗೂ ಪ್ಲಾಟ್ಫಾರ್ಮ್ಗಳಿಗೆ ಕಲ್ಪಿಸಲಾಗುತ್ತಿರುವ ಸೌಲಭ್ಯಗಳು, ನಿಲ್ದಾಣಗಳ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿ ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ನಡೆಯುತ್ತಿರುವ ಎಲ್ಲ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಸುರಕ್ಷತೆ, ಗುಣಮಟ್ಟ ಹಾಗೂ ಪ್ರಯಾಣಿಕರ ಅನುಕೂಲತೆಗೆ ಆದ್ಯತೆ ನೀಡುವಂತೆ ನಿರ್ದೇಶನ ನೀಡಿದರು. ಕಾಮಗಾರಿಗಳ ಪ್ರಗತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವುದರ ಜೊತೆಗೆ ಸಂಬಂಧಿತ ಎಲ್ಲ ವಿಭಾಗಗಳ ನಡುವೆ ಸಮನ್ವಯವನ್ನು ಖಚಿತಪಡಿಸಿಕೊಳ್ಳುವಂತೆಯೂ ಸಲಹೆ ನೀಡಿದರು.
ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ಸೇರಿದಂತೆ ವಿಭಾಗದ ಇತರ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿವಿಧ ಕಾಮಗಾರಿಗಳ ಪ್ರಗತಿ ಹಾಗೂ ಮಾರ್ಗದ ಕಾರ್ಯಾಚರಣೆ ಮತ್ತು ಮೂಲಸೌಕರ್ಯಕ್ಕೆ ಸಂಬಂಧಿಸಿದ ಅಗತ್ಯತೆಗಳ ಕುರಿತು ಅಧಿಕಾರಿಗಳು ಪ್ರಧಾನ ವ್ಯವಸ್ಥಾಪಕರಿಗೆ ಮಾಹಿತಿ ನೀಡಿದರು.