ಕಾಸರಗೋಡು, ಆ. 20 (DaijiworldNews/TA): ನಗರದ ಎಂ.ಜಿ. ರಸ್ತೆಯ ಹೊಸ ಬಸ್ ನಿಲ್ದಾಣದ ಬಳಿ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರನ್ನು ತಳಂಗರ ಬಾಂಗೋಡ್ ನ ಹನೀಫ್ (55) ಎಂದು ಗುರುತಿಸಲಾಗಿದೆ.

ಬುಧವಾರ ಸಂಜೆ ಹೊಸ ಬಸ್ ನಿಲ್ದಾಣದಿಂದ ಹಳೆಯ ಬಸ್ ನಿಲ್ದಾಣದ ಕಡೆ ಸ್ಕೂಟರ್ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿತ್ತು. ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ನಿಂದ ರಸ್ತೆಗೆ ಬಿದ್ದ ಹನೀಫ್ ಅವರ ಕಾಲಿನ ಮೇಲೆ ಲಾರಿ ಹರಿದಿದೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಸ್ಥಳೀಯರು ತಕ್ಷಣ ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಿದರು.
ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಹಾಗೂ ಅಲ್ಲಿಂದ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹನೀಫ್ ಅವರು ಗುರುವಾರ ಬೆಳಗ್ಗೆ ಮೃತಪಟ್ಟರು. ಹನೀಫಾ ಅವರು ಬಿ.ಸಿ. ರಸ್ತೆಯ ವಿದ್ಯಾನಗರದಲ್ಲಿರುವ ಫ್ಲಕ್ಸ್ ಅಂಗಡಿಯ ಮಾಲೀಕರಾಗಿದ್ದರು.