ಬಂಟ್ವಾಳ, ಸೆ.14 (DaijiworldNews/TA): ಮಾಜಿ ಸಚಿವ ಬಿ.ರಮಾನಾಥ ರೈ ಅವರ 75ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಸರಣಿಗೆ ಬಿ.ಸಿ.ರೋಡಿನ ಡಾ| ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಲಾಂಛನ ಬಿಡುಗಡೆ ಮೂಲಕ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ರಮಾನಾಥ ರೈ ಅವರನ್ನು ಸನ್ಮಾನಿಸಿ, ಶುಭ ಹಾರೈಸಲಾಯಿತು. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ| ತುಕಾರಾಮ ಪೂಜಾರಿ ಮಾತನಾಡಿ, ರಮಾನಾಥ ರೈ ಅವರನ್ನು ಕರಾವಳಿಯ ರಾಜಕೀಯ ಭೀಷ್ಮ ಎಂದು ಬಣ್ಣಿಸಿದರು. ಸನ್ಮಾನ ಸ್ವೀಕರಿಸಿದ ರಮಾನಾಥ ರೈ, ಜನ್ಮದಿನವನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೆ ಸಮಾಜಕ್ಕೆ ಉಪಯುಕ್ತವಾಗುವ ಕಾರ್ಯಗಳ ಮೂಲಕ ಆಚರಿಸುತ್ತಿರುವುದು ಸಂತಸದ ವಿಚಾರ ಎಂದರು.
75ನೇ ಜನ್ಮದಿನಾಚರಣಾ ಸಮಿತಿ ಅಧ್ಯಕ್ಷ ಚಂದ್ರಪ್ರಕಾಶ ಶೆಟ್ಟಿ, ರೆ| ಫಾ| ವಿಕ್ಟರ್ ಡಿಸೋಜ ಶುಭ ಹಾರೈಸಿದರು. ಸಮಿತಿ ಕಾರ್ಯಾಧ್ಯಕ್ಷ ಬಿ. ಪದ್ಮಶೇಖರ ಜೈನ್, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರಾದ ಮಮತಾ ಗಟ್ಟಿ, ಶಾಲೆಟ್ ಪಿಂಟೊ, ಲಾವಣ್ಯ ಬಲ್ಲಾಳ್, ಬೇಬಿ ಕುಂದರ್, ಮಲ್ಲಿಕಾ ಪಕ್ಕಳ, ಎಂ.ಎಸ್. ಮುಹಮ್ಮದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.