ಬೆಂಗಳೂರು, ಏ.05 (DaijiworldNews/AK):ಕೆ.ಎಸ್.ಈಶ್ವರಪ್ಪ ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಮೂರು ತಿಂಗಳಲ್ಲಿ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಕೆಎಸ್ ಈಶ್ವರಪ್ಪ ಅವರು ಜಲಸಂಪನ್ಮೂಲ ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂದು 2016ರಲ್ಲಿ ವಕೀಲ ಬಿ.ವಿನೋದ್ ಎಂಬುವರು ಶಿವಮೊಗ್ಗ ಲೋಕಾಯುಕ್ತ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.
ಆದರೆ, ಶಿವಮೊಗ್ಗ ಲೋಕಾಯುಕ್ತ ನ್ಯಾಯಾಲಯ ಖಾಸಗಿ ದೂರು ಸಮರ್ಕವಾಗಿಲ್ಲವೆಂದು ವಜಾಗೊಳಿಸಿತ್ತು. ವಜಾ ಆದೇಶ ಪ್ರಶ್ನಿಸಿ ಬಿ.ವಿನೋದ್ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ 2020ರಲ್ಲಿ ದೂರನ್ನು ಮರು ಪರಿಗಣನೆಗೆ ತೆಗೆದುಕೊಳ್ಳುವಂತೆ ಶಿವಮೊಗ್ಗ ಲೋಕಾಯುಕ್ತ ನ್ಯಾಯಾಲಯಕ್ಕೆ ಆದೇಶಿಸಿತ್ತು. ನಂತರ, ಶಿವಮೊಗ್ಗ ಲೋಕಾಯುಕ್ತ ನ್ಯಾಯಾಲಯ, ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಿದೆ.