ಇಂಫಾಲ, ಜೂ. 02 (DaijiworldNews/AA): ಕಳೆದ ನಾಲ್ಕು ದಿನಗಳಿಂದ ನಿರಂತರ ಮಳೆ ಸುರಿದ ಪರಿಣಾಮ ಮಣಿಪುರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ಹಿನ್ನಲೆ 19 ಸಾವಿರಕ್ಕೂ ಅಧಿಕ ಜನರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಮಾಹಿತಿ ನೀಡಿದ್ದಾರೆ.

ಧಾರಕಾರ ಮಳೆಯಾದ ಕಾರಣ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹ ಪರಿಸ್ಥಿತಿ ಜತೆಗೆ ಭೂಕುಸಿತ ಉಂಟಾಗಿದೆ. ಪ್ರವಾಹದಿಂದ ಸುಮಾರು 3,365 ಮನೆಗಳು ಹಾನಿಗೊಳಗಾಗಿದ್ದು, 19,811 ಮಂದಿ ತೊಂದರೆಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ಪೂರ್ವ ಇಂಫಾಲ ಜಿಲ್ಲೆಯಲ್ಲಿ ಇರಿಲ್ ನದಿಯು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಹೀಂಗಾಂಗ್, ವಾಂಗೈ ಮತ್ತು ಖುರೈ ಸೇರಿದಂತೆ ಸೇನಾಪತಿ ಜಿಲ್ಲೆಯಲ್ಲಿ ಹೆಚ್ಚು ಹಾನಿಯುಂಟಾಗಿದೆ. ಹೀಗಾಗಿ ಪುನರ್ವಸತಿ ಶಿಬಿರಗಳನ್ನು ತೆರಯಲಾಗಿದೆ. ಇನ್ನು ಪೂರ್ವ ಇಂಫಾಲದ ಚೆಕಾನ್ನಲ್ಲಿ ನದಿ ಉಕ್ಕಿ ಹರಿಯುತ್ತಿದ್ದು ಆಲ್ ಇಂಡಿಯಾ ರೆಡಿಯೊ, ಸರ್ಕಾರಿ ಜವಾಹರಲಾಲ್ ನೆಹರು ವೈದ್ಯಕೀಯ ವಿಜ್ಞಾನ ಸಂಸ್ಥೆ ಸೇರಿದಂತೆ ಹಲವಾರು ಕಚೇರಿಗಳು, ಸಂಸ್ಥೆಗಳ ಆವರಣಗಳು ಸಂಪೂರ್ಣವಾಗಿ ಜಲಾವೃತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು ಇಂಫಾಲದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದು, ಪೂರ್ವ ಇಂಫಾಲದಲ್ಲಿ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿನ ಸುಮಾರು 800 ಜನರನ್ನು ಸೇನೆ ಮತ್ತು ಅಸ್ಸಾಂ ರೈಫಲ್ಸ್ ಸಿಬ್ಬಂದಿ ರಕ್ಷಿಸಿದ್ದಾರೆ ಎಂದು ಹೇಳಿದ್ದಾರೆ. ಲೋಕಸಭಾ ಸಂಸದ ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ಅವರು ಪ್ರವಾಹ ಪರಿಸ್ಥಿತಿಯನ್ನು 'ರಾಜ್ಯ ವಿಪತ್ತು' ಎಂದು ಘೋಷಿಸುವಂತೆ ರಾಜ್ಯಪಾಲರನ್ನು ಒತ್ತಾಯಿಸಿರುತ್ತಾರೆ.