ಬೆಂಗಳೂರು, ಜೂ. 06 (DaijiworldNews/AA): ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ 11 ಮಂದಿ ಬಲಿಯಾದ ಪ್ರಕರಣದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ವಿರುದ್ಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ಏಕಸದಸ್ಯ ಪೀಠವು ಶುಕ್ರವಾರ ಮಧ್ಯಂತರ ಆದೇಶ ಹೊರಡಿಸಿದೆ.

ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಕೆಎಸ್ಸಿಎ ಆಡಳಿತ ಮಂಡಳಿ ಮತ್ತು ಅದರ ಉನ್ನತ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೆಎಸ್ಸಿಎ ಕೋರಿತ್ತು. ಅದರಂತೆ ವಿಚಾರಣೆ ನಡೆಸಿದ ಹೈಕೋರ್ಟ್ ಕೆಎಸ್ಸಿಎ ಅಧಿಕಾರಿಗಳಿಗೆ ಬಂಧನದಿಂದ ರಕ್ಷಣೆ ನೀಡಲು ಅನುಮತಿ ನೀಡಿದೆ.
ಇನ್ನು ವಿಚಾರಣೆ ನಡೆಸಿದ ನ್ಯಾ. ಎಸ್.ಆರ್.ಕೃಷ್ಣ ಕುಮಾರ್ ಅವರು, ಕೆಎಸ್ಸಿಎ ಆಡಳಿತ ಮಂಡಳಿಯ ಅಧ್ಯಕ್ಷ ರಘುರಾಮ್ ಭಟ್, ಕಾರ್ಯದರ್ಶಿ ಎ. ಶಂಕರ್ ಮತ್ತು ಖಜಾಂಚಿ ಇ.ಎಸ್.ಜೈರಾಮ್ ಅವರಿಗೆ ಮಧ್ಯಂತರ ಪರಿಹಾರ ನೀಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ, ತನಿಖೆಗೆ ಸಹಕರಿಸಬೇಕು. ಹಕ್ಕುಗಳು ಮತ್ತು ವಾದಗಳಿಗೆ ಯಾವುದೇ ಪೂರ್ವಾಗ್ರಹವಿಲ್ಲದೆ, ಮುಂದಿನ ವಿಚಾರಣೆಯ ದಿನಾಂಕದವರೆಗೆ ಅರ್ಜಿದಾರರು ನಡೆಯುತ್ತಿರುವ ತನಿಖೆ, ವಿಚಾರಣೆ, ಆಯೋಗ ಇತ್ಯಾದಿಗಳಿಗೆ ಸಹಕರಿಸಬೇಕು ಎಂದು ಸೂಚಿಸಿದ್ದಾರೆ.
ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಕೆಎಸ್ಸಿಎ ಪ್ರತಿನಿಧಿಗಳಿಗೆ ಬಂಧನದಿಂದ ರಕ್ಷಣೆ ನೀಡಿದೆ. ಜೊತೆಗೆ ಪ್ರಕರಣವನ್ನು ರದ್ದುಗೊಳಿಸುವ ಅರ್ಜಿಯ ಮುಂದಿನ ವಿಚಾರಣೆ ಜೂನ್ 16 ರಂದು ನಡೆಯಲಿದೆ.