ಬೆಂಗಳೂರು,ಜೂ. 0 (DaijiworldNews/AK): ಆರ್.ಸಿ.ಬಿ. ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ ಸಂಭವಿಸಿದ ಸಾವು- ನೋವಿನ ನೇರ ಹೊಣೆಯನ್ನು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೇ ಹೊರಬೇಕಿದೆ. ಅವರು ಅಧಿಕಾರಿಗಳ ಮೂತಿಗೆ ಒರೆಸದೆ, ರಾಜೀನಾಮೆ ಕೊಡಬೇಕು ಎಂದು ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರು ಆಗ್ರಹವನ್ನು ಮುಂದಿಟ್ಟಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಕುರಿತು ಹೈಕೋರ್ಟಿನ ಪ್ರಸಕ್ತ ನ್ಯಾಯಮೂರ್ತಿಯಿಂದ ತನಿಖೆ ನಡೆಸಬೇಕು. ಯಾರ ತಪ್ಪೆಂಬುದು ಹೊರಬರಲಿ ಎಂದು ಅಭಿಪ್ರಾಯಪಟ್ಟರು. ಪ್ರಕರಣದ ಕುರಿತು ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದೆ. ನೀವು ಯಾವುದೇ ನಿರ್ಧಾರ ಮಾಡಿದರೂ ಅದಕ್ಕೆ ನಾವು ಸಿದ್ಧ ಎಂದು ಸರಕಾರ ತಿಳಿಸಲಿ ಎಂದು ಸವಾಲೆಸೆದರು.
ಬೆಂಗಳೂರು ಪೊಲೀಸ್ ಕಮೀಷನರ್ ಸರಕಾರದ ಅಂಗವೇ ಆಗಿದ್ದಾರೆ. ಸರಕಾರದ್ದೇನೂ ತಪ್ಪಿಲ್ಲವೆಂದಾದರೆ ಅವರನ್ನು ಅಮಾನತು ಮಾಡುವುದು ಸರಕಾರಕ್ಕೆ ಕಪ್ಪು ಚುಕ್ಕಿ ಎಂದು ಯಾಕೆ ಅನಿಸಿಲ್ಲ ಎಂದು ಕೇಳಿದರು. ಇವತ್ತು ಆರ್ಸಿಬಿಯವರು, ಮ್ಯಾನೇಜ್ಮೆಂಟ್ ತಂಡದವರನ್ನೂ ಬಂಧಿಸಿದ್ದಾರೆ. ಯಾಕೆ ನಿಮ್ಮನ್ನು ಬಂಧಿಸಬಾರದು? ನಟ ಅಲ್ಲು ಅರ್ಜುನ್ ಕಾರ್ಯಕ್ರಮದಲ್ಲಿ ಒಬ್ಬರು ಸತ್ತಾಗ ಅಲ್ಲು ಅರ್ಜುನ್ರನ್ನು ಮನೆಯಿಂದ ಎಳೆದುಕೊಂಡು ಬಂದಿದ್ದರು. ಅಲ್ಲಿಯೂ ಕಾಂಗ್ರೆಸ್ ಸರಕಾರ ಇತ್ತು. ಅವರಂತೆ ಇಲ್ಲಿ ಯಾಕೆ ಆಗುತ್ತಿಲ್ಲ ಎಂದು ಕೇಳಿದರು. ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ ಸುರ್ಜೇವಾಲಾ ಎಲ್ಲಿದ್ದೀರಪ್ಪ ನೀವು? ಎಂದು ಪ್ರಶ್ನಿಸಿದರು.
ಕರ್ನಾಟಕ ರಾಜ್ಯವು ಶೋಕಾಚರಣೆಯಲ್ಲಿದೆ. ಇರುವ ಒಬ್ಬೊಬ್ಬರೇ ಮಕ್ಕಳನ್ನು ತಂದೆ- ತಾಯಂದಿರು ಕಳಕೊಂಡಿದ್ದಾರೆ. ನನ್ನ ಕ್ಷೇತ್ರದ ಎಂ.ಟೆಕ್ ಓದುವ ಹುಡುಗನೊಬ್ಬ ಮೃತಪಟ್ಟಿದ್ದು, ಅವನ ಮನೆಗೆ ಹೋಗಬೇಕೆಂದಿದ್ದೆ. ಮೃತನ ತಂದೆ ಎಂಎಸ್ಎಂಇ ಕೈಗಾರಿಕೋದ್ಯಮಿ. ಅವರ ಕುಟುಂಬ ತೀವ್ರ ಖಿನ್ನತೆಗೆ ಸಿಲುಕಿದ್ದು, ಮಗನ ಮೃತದೇಹವನ್ನೇ ಮನೆಗೆ ತರಲಿಲ್ಲ ಎಂದು ಶೋಭಾ ಕರಂದ್ಲಾಜೆ ಅವರು ಬೇಸರ ವ್ಯಕ್ತಪಡಿಸಿದರು. ಯಾರೂ ನೋಡಲು ಬರಬೇಡಿ ಎಂದು ಹೇಳಿದ್ದಾಗಿ ವಿವರಿಸಿದರು. ಒಬ್ಬನೇ ಮಗನನ್ನು ಕಳಕೊಂಡ ನಾವ್ಯಾಕೆ ಬದುಕಿರಬೇಕು ಎಂಬ ರೀತಿಯಲ್ಲಿ ತಂದೆ ತಾಯಿ ಮಾತನಾಡುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.