ಶಿವಮೊಗ್ಗ, ಜೂ. 10 (DaijiworldNews/AK): ಜನವಿರೋಧಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಹೋರಾಟ ಮಾಡಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನವಿರೋಧಿ ಕಾಂಗ್ರೆಸ್ ಸರಕಾರ ಕಿತ್ತೊಗೆಯುವ ವರೆಗೂ ಹೋರಾಟ ಮುಂದುವರೆಸಲು ನಿರ್ಧರಿಸಿದ್ದೇವೆ. ಜೂನ್ 13ರಂದು ಬೆಂಗಳೂರು ಮಹಾನಗರದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಇದೆ. ಬಿಜೆಪಿ ಕಾರ್ಯಕರ್ತರು, ಘಟನೆಯಲ್ಲಿ ನೊಂದ ಕುಟುಂಬಗಳ ಸದಸ್ಯರು, ನೊಂದವರು ಬರಲಿದ್ದಾರೆ. ಸುಮಾರು 15- 20 ಸಾವಿರ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಸೇರಲಿದ್ದಾರೆ ಎಂದು ವಿವರಿಸಿದರು.
ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ದುರ್ಘಟನೆಯಲ್ಲಿ ಆರೋಪಿ ನಂಬರ್ 1 ಆರ್ಸಿಬಿ ಅಲ್ಲ. ಆರ್ಸಿಬಿ ಕೆಎಸಿಎ, ಡಿಎನ್ಎ ಅವರು ಕೂಡ ಆರೋಪಿಗಳೇ ಆಗಿದ್ದಾರೆ. ಮುಖ್ಯಮಂತ್ರಿಗಳೇ ಆರೋಪಿ ನಂಬರ್ 1, ಉಪ ಮುಖ್ಯಮಂತ್ರಿಗಳು 2ನೇ ಆರೋಪಿ, ಕೈಕಟ್ಟಿ ಕುಳಿತಿದ್ದ ಗೃಹ ಸಚಿವ ಪರಮೇಶ್ವರ್ ಅವರು ಆರೋಪಿ ನಂಬರ್ 3; ನಂತರದ ಹೊಣೆಗಾರರು ಆರ್ಸಿಬಿ, ಕೆಎಸಿಎ, ಡಿಎನ್ಎ ಎಂದು ತಿಳಿಸಿದರು.
ಸರಕಾರಕ್ಕೆ ಕ್ಲೀನ್ ಚಿಟ್ ಪಡೆಯಲೆಂದೇ ಕರ್ತವ್ಯನಿರತ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಈ ಪ್ರಕರಣದ ತನಿಖೆ ನಡೆಸಬೇಕೆಂದು ಬಿಜೆಪಿ ಆಗ್ರಹಿಸಿತ್ತು. ಸಿಐಡಿ ತನಿಖೆಗೆ ಕೊಟ್ಟರು. ಮತ್ತೊಂದು ಕಡೆ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆಗೆ ಆದೇಶಿಸಿದ್ದಾರೆ. ಅವರಿಗೆ ಬೇಕಾದವರನ್ನು ನೇಮಿಸಿ ರಾಜ್ಯ ಸರಕಾರಕ್ಕೆ ಕ್ಲೀನ್ ಚಿಟ್ ಕೊಟ್ಟು ಅಧಿಕಾರಿಗಳ ಮೇಲೆ ಗೂಬೆ ಕೂರಿಸಿ ಹೊಣೆಯಿಂದ ತಪ್ಪಿಸಿಕೊಳ್ಳಲೆಂದೇ ಹೀಗೆ ಮಾಡಿದ್ದಾರೆ ಎಂದು ಆರೋಪಿಸಿದರು.
ರಾಜ್ಯ ಸರಕಾರಕ್ಕೆ ಕಿಂಚಿತ್ತಾದರೂ ಮಾನಮರ್ಯಾದೆ ಇದ್ದರೆ ಹೈಕೋರ್ಟ್ನ ಸಿಟ್ಟಿಂಗ್ ನ್ಯಾಯಮೂರ್ತಿಗಳಿಂದ ಈ ಪ್ರಕರಣದ ತನಿಖೆ ನಡೆಸಲಿ ಎಂದು ವಿಜಯೇಂದ್ರ ಅವರು ಆಗ್ರಹಿಸಿದರು.
ಸಿಎಂ, ಡಿಸಿಎಂ ನಡುವೆ ಪೈಪೋಟಿ
ಸಿಎಂ, ಡಿಸಿಎಂ ನಡುವೆ ಪೈಪೋಟಿ ಇತ್ತು. ತಮ್ಮ ಜನಪ್ರಿಯತೆಗಾಗಿ ವಿಧಾನಸೌಧದ ಮುಂದೆ ಮುಖ್ಯಮಂತ್ರಿ ಕಾರ್ಯಕ್ರಮ ಆಯೋಜಿಸಿದ್ದರು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಡಿ.ಕೆ.ಶಿವಕುಮಾರ್ ಕಾರ್ಯಕ್ರಮ ಏರ್ಪಡಿಸಿದ್ದರು ಎಂದು ಪ್ರಶ್ನೆಗೆ ಉತ್ತರಿಸಿದರು. ಇವರ ಗೊಂದಲದಿಂದ ಬಲಿ ಆದುದು ಯಾರು? ಯಾರ ಮರ್ಯಾದೆ ಹೋಗಿದೆ? ಎಂದು ವಿಜಯೇಂದ್ರ ಅವರು ಕೇಳಿದರು.
ಚಿನ್ನಸ್ವಾಮಿ ಸ್ಟೇಡಿಯಂ ವಿಚಾರದಲ್ಲಿ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಸಿಎಂ, ಡಿಸಿಎಂ ನಡುವೆ ಸಂಬಂಧವೇ ಇಲ್ಲದ ಸರಕಾರ ಎಂದು ಮುಖ್ಯಮಂತ್ರಿಗಳು ಹೇಳಿಕೆ ಕೊಡಲಿ ಎಂದು ಅವರು ಒತ್ತಾಯಿಸಿದರು.