ಮೈಸೂರು, ನ. 03 (DaijiworldNews/AK):ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಪಾಲಿಕೆ ಕಚೇರಿಯಲ್ಲಿ ತಮ್ಮದೇ ಅಧ್ಯಕ್ಷತೆಯಲ್ಲಿ ನಡೆದ ಮೊದಲ "ಗ್ರೇಟರ್ ಮೈಸೂರು" ಸಭೆಯಲ್ಲಿ ಅಧಿಕಾರಿಗಳಿಗೆ ತಮ್ಮ ಸ್ಪಷ್ಟ ಪರಿಕಲ್ಪನೆಗಳನ್ನು ವಿವರಿಸಿ ಸೂಚನೆಗಳನ್ನು ನೀಡಿದರು. ಬೆಂಗಳೂರಿನ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, STP ಯಾವುದರ ಸಮಸ್ಯೆಯೂ ಇರದಂತೆ ಸ್ಪಷ್ಟ ವೈಜ್ಞಾನಿಕ ಬ್ಲೂ ಪ್ರಿಂಟ್ ಸಿದ್ದಪಡಿಸಿ: ಜಿಲ್ಲಾಡಳಿತಕ್ಕೆ ಸಿ.ಎಂ ಸೂಚನೆ ನೀಡಿದರು.
ಸಭೆಯಲ್ಲಿ ಗ್ರೇಟರ್ ಮೈಸೂರು ಸುಸಜ್ಜಿತವಾಗಿರಬೇಕು ಮತ್ತು ವ್ಯವಸ್ಥಿತವಾಗಿರಬೇಕು. ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಹೀಗೆ ಒದಗಿಸುವಾಗ ಈಗಿನ ಜನಸಂಖ್ಯೆಗೆ ಮಾತ್ರ ಯೋಜನೆ ರೂಪಿಸದೆ ಮುಂದಿನ 15-20 ವರ್ಷಗಳ ಮುಂದಾಲೋಚನೆಯಿಂದ ವೈಜ್ಞಾನಿಕ ಯೋಜನೆ ರೂಪಿಸಿ. ಟ್ರಾಫಿಕ್ ಸಮಸ್ಯೆ ಯಾವುದೇ ಕಾರಣಕ್ಕೂ ಇರಬಾರದು. ಉದ್ಯೋಗ ಸೃಷ್ಟಿಯಿಂದ ಘನ ತ್ಯಾಜ್ಯ ನಿರ್ವಹಣೆವರೆಗೂ ಆಧುನಿಕ ತಂತ್ರಜ್ಞಾನ ಬಳಕೆ ಬಗ್ಗೆ ಯೋಜನೆ ಸಿದ್ಧಪಡಿಸಿ. ತ್ಯಾಜ್ಯ ವಿಲೇವಾರಿ, ಕೈಗಾರಿಕಾ ತ್ಯಾಜ್ಯ ವಿಲೇವಾರಿ ಎಲ್ಲವೂ ವೈಜ್ಞಾನಿಕವಾಗಿರಬೇಕು. ಆಧುನಿಕ ತಂತ್ರಜ್ಞಾನದ ನೆರವು ಪಡೆಯಬೇಕು ಎಂದು ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಡಾವಣೆಗಳ ನಿರ್ಮಾಣದಲ್ಲಿ ಆಗುವಾಗ ಚರಂಡಿ, ರಸ್ತೆಗಳು, ಒಳಚರಂಡಿ, ನೀರು, ವಿದ್ಯುತ್ ಜೊತೆಗೆ ಪಾರ್ಕ್ ಗಳು ವ್ಯವಸ್ಥಿತವಾಗಿರಬೇಕು. ಮೈಸೂರಿಗೆ ಮತ್ತೊಂದು ಹೊರ ವರ್ತುಲ ರಸ್ತೆ ಅಗತ್ಯ ಬೀಳುತ್ತದೆ. ಇದಕ್ಕೆ ಈಗಲೇ plan ಮಾಡಿಕೊಳ್ಳಿ. ಆದಾಯವೂ ಹೆಚ್ಚಾಗಬೇಕು. ಇದಕ್ಕೆ ಸ್ಪಷ್ಟ ಅಂದಾಜು, ಯೋಜನೆ ರೂಪಿಸಿಕೊಳ್ಳಿ. ವಿಶಾಲವಾದ ರಸ್ತೆಗಳು ಮೈಸೂರಿನ ಹೆಗ್ಗಳಿಕೆ, ಗ್ರೇಟರ್ ಮೈಸೂರು ಇನ್ನಷ್ಟು ಯೋಜನಾಬದ್ಧವಾಗಿರಬೇಕು.ಜನಸಂಖ್ಯೆಗೆ ಅನುಗುಣವಾಗಿ ಪೌರ ಕಾರ್ಮಿಕರ ಸಂಖ್ಯೆ ಹೆಚ್ಚಾಗಬೇಕು ಎಂದರು.