ತಿರುವನಂತಪುರಂ, ಜ. 04 (DaijiworldNews/AA): ರೈಲ್ವೇ ನಿಲ್ದಾಣದ ಪಕ್ಕದಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ 200ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ಕೇರಳದ ತ್ರಿಶೂರ್ ರೈಲು ನಿಲ್ದಾಣದಲ್ಲಿ ಭಾನುವಾರ ಸಂಭವಿಸಿದೆ.

ಪ್ಲಾಟ್ಫಾರ್ಮ್ ಸಂಖ್ಯೆ 2ರ ಬಳಿ ಇರುವ ದ್ವಿಚಕ್ರ ವಾಹನಗಳ ಪಾರ್ಕಿಂಗ್ ಪ್ರದೇಶದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಪ್ರಯಾಣಿಕರು ಮತ್ತು ಹತ್ತಿರದ ನಿವಾಸಿಗಳಲ್ಲಿ ಕೆಲಕಾಲ ಆತಂಕ ಉಂಟಾಗಿತ್ತು. ಬೆಳಿಗ್ಗೆ 6:45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.
ಪಾರ್ಕಿಂಗ್ ಮಾಡಿದ್ದ ವಾಹನಗಳಲ್ಲಿ ಇಂಧನ ಇದ್ದಿದ್ದರಿಂದ ಬೆಂಕಿ ವೇಗವಾಗಿ ಹಬ್ಬಿದೆ. ಘಟನೆಯಲ್ಲಿ ಹಲವಾರು ವಾಹನಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಕೆಲವು ವಾಹನಗಳಿಗೆ ಭಾಗಶಃ ಹಾನಿಯಾಗಿದೆ. ಹಾನಿಗೊಳಗಾದ ವಾಹನಗಳ ಮಾಹಿತಿಯನ್ನು ಅಧಿಕಾರಿಗಳು ಕಲೆಹಾಕುತ್ತಿದ್ದಾರೆ. ಇನ್ನು ಘಟನೆಯ ನಿಖರ ಕಾರಣ ತಿಳಿದು ಬಂದಿಲ್ಲ.