ನವದೆಹಲಿ, ಜ. 06 (DaijiworldNews/TA): ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಸುರೇಶ್ ಕಲ್ಮಾಡಿ ಅವರು ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.

ಸುರೇಶ್ ಕಲ್ಮಾಡಿ ಅವರು ಕೇಂದ್ರ ಸರ್ಕಾರದಲ್ಲಿ ರೈಲ್ವೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದ ಅವರು, ರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಆಡಳಿತ ಕ್ಷೇತ್ರದಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು. ಪುಣೆಯ ಪ್ರಮುಖ ರಾಜಕೀಯ ನಾಯಕನಾಗಿ ಗುರುತಿಸಿಕೊಂಡಿದ್ದ ಕಲ್ಮಾಡಿ, ಲೋಕಸಭೆಯಲ್ಲಿ ಹಲವು ಬಾರಿ ಪುಣೆ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.
ತಮ್ಮ ದೀರ್ಘ ರಾಜಕೀಯ ಜೀವನದಲ್ಲಿ ಅವರು ಅನೇಕ ಮಹತ್ವದ ಹುದ್ದೆಗಳನ್ನು ಅಲಂಕರಿಸಿದ್ದು, ರಾಜಕೀಯ ಹಾಗೂ ಕ್ರೀಡಾ ಆಡಳಿತ ಎರಡೂ ಕ್ಷೇತ್ರಗಳಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದರು. ಅವರ ನಿಧನಕ್ಕೆ ಪಕ್ಷಾತೀತ ರಾಜಕೀಯ ನಾಯಕರು ಶೋಕ ವ್ಯಕ್ತಪಡಿಸಿದ್ದು, ಸಾರ್ವಜನಿಕ ಜೀವನಕ್ಕೆ ಅವರು ನೀಡಿದ ಸೇವೆ ಮತ್ತು ಕೊಡುಗೆಗಳನ್ನು ಸ್ಮರಿಸಿದ್ದಾರೆ.
ಸುರೇಶ್ ಕಲ್ಮಾಡಿ ಅವರು ಪತ್ನಿ, ಒಬ್ಬ ಮಗ ಮತ್ತು ಸೊಸೆ, ಇಬ್ಬರು ಪುತ್ರಿಯರು, ಅಳಿಯರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರವನ್ನು ಪುಣೆಯ ಎರಾಂಡ್ವಾನೆ ಪ್ರದೇಶದಲ್ಲಿರುವ ಕಲ್ಮಾಡಿ ನಿವಾಸದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಇಡಲಾಗುವುದು. ನಂತರ ಮಧ್ಯಾಹ್ನ 3.30ಕ್ಕೆ ನವಿ ಪೇತ್ನಲ್ಲಿರುವ ವೈಕುಂಠ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.