ಬೆಂಗಳೂರು, ಜ. 08 (DaijiworldNews/AA): ಬಳ್ಳಾರಿ ಘಟನೆಯ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಪ್ರಕರಣವನ್ನು ತನಿಖೆ ಮಾಡುವ ಸಾಮರ್ಥ್ಯ ನಮ್ಮ ಪೊಲೀಸರಿಗೆ ಇದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ನಮ್ಮ ಪೊಲೀಸರಿಗೆ ತನಿಖೆ ಮಾಡಲು ಆಗುವುದಿಲ್ಲ ಎಂಬ ಸಂದರ್ಭ ಬಂದರೆ ಸಿಬಿಐಗೆ ನೀಡುವ ಬಗ್ಗೆ ಮಾತನಾಡಬಹುದು. ಈಗಾಗಲೇ ಯಾವುದೇ ಪ್ರಕರಣಗಳನ್ನು ಸಿಬಿಐಗೆ ನೀಡುವುದಿಲ್ಲ ಎಂದು ಕ್ಯಾಬಿನೆಟ್ನಲ್ಲಿ ತೀರ್ಮಾನಿಸಲಾಗಿದೆ. ಸಿಬಿಐಗೆ ಕೊಡುವ ಅಗತ್ಯತೆಯೂ ಇಲ್ಲ" ಎಂದು ಹೇಳಿದರು.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, "ಕುಮಾರಸ್ವಾಮಿಯವರು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು. ಕೇಂದ್ರದಲ್ಲಿ ಬೃಹತ್ ಕೈಗಾರಿಕೆ ಸಚಿವರಾಗಿದ್ದಾರೆ. ನನ್ನ ಬಗ್ಗೆ ವೈಯಕ್ತಿಕವಾಗಿ ಹೇಳಿಕೆ ಕೊಟ್ಟಿದ್ದಾರೆ. ನಾನು ಅವರ ಬಗ್ಗೆ ನಾನು ಏನು ಬೇಕಾದರೂ ಮಾತನಾಡಬಹುದು. ಅವರು ಬಹಳ ಜವಾಬ್ದಾರಿಯುತವಾಗಿ ಹೇಳಿಕೆ ಕೊಟ್ಟಿದ್ದಾರೆ ಎಂದು ಭಾವಿಸುತ್ತೇನೆ. ಅದನ್ನು ಸ್ವೀಕಾರ ಮಾಡುತ್ತೇನೆ" ಎಂದರು.
"ರಾಜ್ಯದಲ್ಲಿ ಕಾನೂನು ವ್ಯವಸ್ಥೆಯನ್ನು ಯಾವ ರೀತಿ ಆಡಳಿತ ಮಾಡಬೇಕು ಎಂಬ ಅರಿವು ನನಗಿದೆ ಎಂದು ಅವರಿಗೆ ಹೇಳಬಯಸುತ್ತೇನೆ. ೩೮ ವರ್ಷ ರಾಜಕಾರಣದಲ್ಲಿದ್ದೇನೆ. ಅನೇಕ ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ಕುಮಾರಸ್ವಾಮಿಯವರ ಜೊತೆಗೂ ಕೆಲಸ ಮಾಡಿದ್ದೇನೆ. ಹಾಗಾಗಿ ನನ್ನ ಸಾಮಾರ್ಥ್ಯ ಮತ್ತು ವ್ಯಕ್ತಿತ್ವನೂ ಅವರಿಗೆ ಗೊತ್ತಿದೆ. ಅವರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ" ಎಂದು ವಾಗ್ದಾಳಿ ನಡೆಸಿದರು.