ಬೆಂಗಳೂರು, ಜ. 21 (DaijiworldNews/AA): ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದು ಕೇಂದ್ರ ಸರ್ಕಾರದ ಯೋಜನೆಗೆ ಅಡ್ಡಗಾಲು ಹಾಕಲು ಪ್ರಯತ್ನ ಮಾಡಿದೆ. ಆದರೆ ಯೋಜನೆಯ ವಿರುದ್ಧದ ನಿರ್ಣಯದಿಂದ ಯಾವುದೇ ಪ್ರಯೋಜನವಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದು ಕೇಂದ್ರ ಸರ್ಕಾರದ ಯೋಜನೆಗೆ ಅಡ್ಡಗಾಲು ಹಾಕಲು ಪ್ರಯತ್ನ ಮಾಡಿದೆ. ವಿಬಿ ಜಿ ರಾಮ್ ಜಿ ಯೋಜನೆಯ ವಿರುದ್ಧ ನಿರ್ಣಯ ಕೈಗೊಂಡು ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುತ್ತದೆ. ಈ ಯೋಜನೆಯಲ್ಲಿ ನಿಜವಾದ ಫಲಾನುಭವಿಗಳಿಗೆ ಕೂಲಿ ಸಿಗುವಂತೆ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ" ಎಂದು ಹೇಳಿದರು.
"ಉದ್ಯೋಗ ಖಾತರಿ ಯೋಜನೆಯಲ್ಲಿ ಸಾವಿರಾರು ಕೋಟಿ ರೂ. ಅಕ್ರಮ ನಡೆದಿದೆ. ಇದು ಸಿಎಜಿ ವರದಿಯಲ್ಲೂ ಸಾಬೀತಾಗಿದೆ. ಹೊಸ ಯೋಜನೆಯಲ್ಲಿ ಪಾರದರ್ಶಕತೆ ಹೆಚ್ಚಿರುವುದರ ಜೊತೆಗೆ, ಕೇಂದ್ರ 60% ಹಾಗೂ ರಾಜ್ಯ 40% ಅನುದಾನ ನೀಡುವ ವ್ಯವಸ್ಥೆ ತಂದು ಅನುದಾನವನ್ನು ಹೆಚ್ಚಿಸಲಾಗಿದೆ. ಯೋಜನೆ ಕುರಿತು ತಿಳಿಯಲು ಹಾಗೂ ಅರಿವು ಮೂಡಿಸಲು ಎಲ್ಲ ಶಾಸಕರು, ಮುಖಂಡರ ಜೊತೆ ಸಭೆ ನಡೆಯಲಿದೆ. ಈ ಬಗ್ಗೆ ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಈ ಕುರಿತು ಪತ್ರ ಬರೆದಿದ್ದೇನೆ. ಯೋಜನೆ ಕುರಿತ ಕಾರ್ಯಕ್ರಮದಲ್ಲಿ ಅವರು ಭಾಗವಹಿಸುತ್ತೇನೆ ಎಂದಿದ್ದಾರೆ. ಹಾಗೆಯೇ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರೂ ಬರಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಯೋಜನೆಯ ಬಗ್ಗೆ ವಿವರಿಸಲಾಗುತ್ತದೆ. ಅಧಿವೇಶನಕ್ಕೂ ಮೊದಲು ಕಾರ್ಯಕ್ರಮ ನಡೆಸಿ ಯೋಜನೆ ಬಗ್ಗೆ ಜನರಿಗೆ ತಿಳಿಸಲಾಗುವುದು" ಎಂದು ನುಡಿದರು.
"ಕಾಂಗ್ರೆಸ್ ಸರ್ಕಾರಕ್ಕೆ ಅಧಿವೇಶನ ನಡೆಸುವ ಅಗತ್ಯವಿರಲಿಲ್ಲ. ನೇರವಾಗಿ ಸಚಿವರನ್ನು ಅಥವಾ ಪ್ರಧಾನಿಯನ್ನು ಭೇಟಿ ಮಾಡಬಹುದಿತ್ತು. ಈ ನಿರ್ಣಯದಿಂದ ಮಾಧ್ಯಮಗಳಿಗೆ ಸಂದೇಶ ನೀಡಬಹುದೇ ಹೊರತು ಆಡಳಿತಾತ್ಮಕವಾಗಿ ಪ್ರಯೋಜನವಾಗುವುದಿಲ್ಲ. ಕಾಂಗ್ರೆಸ್ ನವರು ಗ್ಯಾರಂಟಿ ಜಾರಿ ಮಾಡಿರುವುದಕ್ಕೆ ಬಿಜೆಪಿಯಿಂದ ಖಂಡನಾ ನಿರ್ಣಯ ಮಾಡಿಲ್ಲ. ಕೇಂದ್ರ ಸರ್ಕಾರ ನಿಯಮ ಪ್ರಕಾರ ಹೊಸ ಯೋಜನೆ ತಂದಿದೆ. ಆದರೆ ಇದರಲ್ಲಿ ರಾಜಕೀಯ ಮಾಡಬಾರದು. ರಾಜ್ಯದಲ್ಲಿ ಆಡಳಿತ ಸರಿಯಾಗಿ ನಡೆಯುತ್ತಿಲ್ಲ. ಕಾನೂನು ಸುವ್ಯವಸ್ಥೆ ಕುಸಿದಿದ್ದು, ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಯಾವ ಇಲಾಖೆಯಲ್ಲೂ ಅನುದಾನ ಇಲ್ಲ. ದಿವಾಳಿಯಾಗಿರುವುದರಿಂದ ಯೋಜನೆಗೆ ಕೊಡಲು ಹಣ ಇಲ್ಲ. ಕೇಂದ್ರ ಸರ್ಕಾರವನ್ನು ತೆಗಳುವ ಭಾಷಣವನ್ನು ಓದಬಾರದು, ಈ ಕುರಿತು ಸರ್ಕಾರಕ್ಕೆ ಕಿವಿಮಾತು ಹೇಳಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತೇವೆ" ಎಂದರು.